ಸಾಲಿಗ್ರಾಮ: ಹರದನಹಳ್ಳಿ ಗ್ರಾಮವನ್ನು ಹಂತಹಂತವಾಗಿ ಸಮಗ್ರ ಅಭಿವೃದ್ದಿ ಮಾಡುವ ಮೂಲಕ ಜನತೆಯ ಋಣವನ್ನು ತೀರಿಸಲಾಗುವುದು ಎಂದು ಶಾಸಕ ಡಿ.ರವಿಶಂಕರ್ ಹೇಳಿದರು.
ಅವರು ತಾಲೂಕಿನ ಹರದನಹಳ್ಳಿಯಲ್ಲಿ ಗ್ರಾಮಸ್ಥರಿಂದ ಅಭಿನಂದನೆಯನ್ನು ಸ್ವೀಕರಿಸಿ ಮಾತನಾಡಿದರು. ಕ್ಷೇತ್ರದ ಜನರು ಅತೀ ಹೆಚ್ಚಿನ ಮತಗಳನ್ನು ನೀಡುವ ಮೂಲಕ ನನ್ನನ್ನು ಶಾಸಕನನ್ನಾಗಿ ಆಯ್ಕೆ ಮಾಡಿದ್ದಾರೆ. ಸಾಲಿಗ್ರಾಮ ಮತ್ತು ಕೆ.ಆರ್.ನಗರ ಎರಡು ತಾಲೂಕುಗಳನ್ನು ಪಕ್ಷಾತೀತವಾಗಿ, ಜಾತ್ಯಾತೀತವಾಗಿ ಅಭಿವೃದ್ದಿ ಪಡಿಸುವ ಕೆಲಸವನ್ನು ಮಾಡಲಾಗುವುದು. ತಾಲೂಕಿನ ಆಸ್ಪತ್ರೆಗಳಲ್ಲಿ ಸಿಬ್ಬಂದಿಗಳ ಕೊರತೆ ಇದೆ ಇದರ ಬಗ್ಗೆ ಈಗಾಗಲೇ ಆರೋಗ್ಯ ಇಲಾಖೆಯ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ ಶೀಘ್ರದಲ್ಲೆ ಈ ಸಮಸ್ಯೆಯನ್ನು ಪರಿಹರಿಸುವ ನಿಟ್ಟಿನಲ್ಲಿ ಕೆಲಸವನ್ನು ಮಾಡಲಾಗುವುದು ಜೊತೆಗೆ ಗ್ರಾಮೀಣ ಭಾಗದಲ್ಲಿನ ರಸ್ತೆಗಳ ಅಭಿವೃದ್ದಿ ಕೆಲಸ ಮಾಡುವುದರ ಜೊತೆಗೆ ಗ್ರಾಮೀಣ ಭಾಗದ ಜನರಿಗೆ ಅಗತ್ಯವಾಗಿ ಬೇಕಾದಂತಹ ಮೂಲ ಸೌಕರ್ಯಗಳನ್ನು ಕಲ್ಪಿಸಿಕೊಡಲು ಶ್ರಮಿಸುವುದಾಗಿ ತಿಳಿಸಿದರು.
ಗ್ರಾಮಸ್ಥರ ಮನವಿ: ಗ್ರಾಮದಲ್ಲಿನ ಆರೋಗ್ಯ ಮತ್ತು ಕ್ಷೇಮ ಕೇಂದ್ರಕ್ಕೆ ಸಿಬ್ಬಂದಿಗಳನ್ನು ನೇಮಕ ಮಾಡಬೇಕು, ಬಸ್ ನಿಲ್ದಾಣ ನಿರ್ಮಾಣ ಮಾಡಬೇಕು, ಶ್ರೀ ಮಾರಮ್ಮ ದೇವಸ್ಥಾನ ನಿರ್ಮಾಣ ಮಾಡಿಕೊಡಬೇಕು, ಗ್ರಾಮದಲ್ಲಿನ ಹಲವು ರಸ್ತೆಗಳನ್ನು ಅಭಿವೃದ್ದಿ ಮಾಡುವ ಮೂಲಕ ಗ್ರಾಮದ ಸಮಗ್ರ ಅಭಿವೃದ್ದಿಗೆ ಸಹಕಾರ ನೀಡಬೇಕೆಂದು ಗ್ರಾಮಸ್ಥರು ಶಾಸಕ ಡಿ.ರವಿಶಂಕರ್ ಅವರಲ್ಲಿ ಮನವಿ ಮಾಡಿದರು.
ವೇದಿಕೆ ಕಾರ್ಯಕ್ರಮಕ್ಕೂ ಮೊದಲು ಶಾಸಕ ಡಿ.ರವಿಶಂಕರ್ ಗ್ರಾಮದ ಪ್ರಮುಖ ರಸ್ತೆಯ ಮೂಲಕ ತೆರಳಿ ಮತದಾರರಿಗೆ ಕೃತಜ್ಞತೆಯನ್ನು ಸಲ್ಲಿಸಿದರು ಹಾಗೂ ಗ್ರಾಮದ ಹಲವು ದೇವಾಲಯಗಳಿಗೆ ತೆರಳಿ ವಿಶೇಷ ಪೂಜೆಯನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರುಗಳು ಪಟಾಕಿ ಸಿಡಿಸಿ ಜಯಘೋಷಣೆಗಳನ್ನು ಮೊಳಗಿಸಿ ಸಂಭ್ರಮಿಸಿದರು.
ಸಮಾರಂಭದಲ್ಲಿ ತಾ.ಪಂ.ಮಾಜಿ ಅಧ್ಯಕ್ಷ ಹೆಚ್.ಟಿ.ಮಂಜಪ್ಪ, ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕ ಟಿ.ರಾಮೇಗೌಡ, ಗ್ರಾ.ಪಂ.ಮಾಜಿ ಅಧ್ಯಕ್ಷರಾದ ಹೆಚ್.ಟಿ.ಮಂಜು, ತೇಜೋಮೂರ್ತಿ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ಟಿ.ರವಿ, ಮಾಜಿ ನಿರ್ದೇಶಕ ತಿಮ್ಮೇಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಉದಯ್ಶಂಕರ್, ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಅಧ್ಯಕ್ಷ ಹೇಮಂತ್, ಮುಖಂಡರುಗಳಾದ ಕೃಷ್ಣೇಗೌಡ, ಬಸವೇಗೌಡ, ಗೋವಿಂದರಾಜು, ಸಂದೀಪ್, ತಮ್ಮಯ, ಗಾಯನಹಳ್ಳಿ ನಟರಾಜ್, ಪಿಡಿಓ ಪುಷ್ಪಕಾಂತ್ ಸೇರಿದಂತೆ ಹಲವರು ಇದ್ದರು.