ಮಂಗಳೂರು (ದಕ್ಷಿಣ ಕನ್ನಡ): ಸ್ಪೀಕರ್ ಯು.ಟಿ.ಖಾದರ್ ಅವರಿಗೆ ನಿಷೇಧಿತ ಪಿಎಫ್ ಐ ಸಂಘಟನೆಯ ಬೆದರಿಕೆ ಇದೆ. ನಿವೃತ್ತ ಡಿಜಿಪಿ ಓಂ ಪ್ರಕಾಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಖಾದರ್ ಅವರಿಗೆ ಬೆದರಿಕೆ ಹಾಕಲಾಗಿದೆ. ಈ ಹಿನ್ನೆಲೆಯಲ್ಲಿ ಖಾದರ್ ಎಚ್ಚರದಿಂದ ಇರಬೇಕಾಗಿದೆ ಎಂದು ಮಾಜಿ ಡಿವೈಎಸ್ಪಿ, ಭಾರತೀಯ ಜನಶಕ್ತಿ ಕಾಂಗ್ರೆಸ್ ಅಧ್ಯಕ್ಷೆ ಅನುಪಮಾ ಶೆಣೈ ಹೇಳಿದ್ದಾರೆ.
ಅವರು ಇಂದು ಮಂಗಳೂರು ನಗರದ ಪ್ರೆಸ್ ಕ್ಲಬ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ತನಿಖಾ ದಳ – ಎನ್ಐಎ ಕಚೇರಿಯನ್ನು ಮಂಗಳೂರಿನಲ್ಲಿ ಸ್ಥಾಪಿಸಬೇಕು. ಈ ಬಗ್ಗೆ ಸಂಸದ ಬ್ರಿಜೇಶ್ ಚೌಟ ಸೂಕ್ತ ಕ್ರಮ ವಹಿಸಬೇಕು ಎಂದು ಒತ್ತಾಯಿಸಿದ್ದಾರೆ.
ಓಂ ಪ್ರಕಾಶ್ ಕೊಲೆ ಪ್ರಕರಣದ ತನಿಖೆಯನ್ನು ಎನ್ಐಎಗೆ ವಹಿಸಬೇಕು, ಈ ಬಗ್ಗೆ ಪ್ರತಿಪಕ್ಷದ ಸದಸ್ಯರು ಸರಕಾರದ ಮೇಲೆ ಒತ್ತಡ ಹೇರಬೇಕು ಎಂದು ಅನುಪಮಾ ಶೆಣೈ ಹೇಳಿದರು.
ಸ್ಪೀಕರ್ ಅವರಿಗೆ ಬೆದರಿಕೆ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹ್ಯೂಬ್ಲೋ ವಾಚ್ ಗೆ ಸಂಬಂಧಿಸಿ ಸ್ಪೀಕರ್ ಅವರಿಗೆ ಮತ್ತೊಂದು ಪತ್ರ ಬರೆದಿದ್ದೇನೆ. ಪತ್ರದಲ್ಲಿ ನಾನು ಪ್ರಸ್ತಾಪಿಸಿರುವ ವಿಷಯಕ್ಕೆ ಸಂಬಂಧಿಸಿ ಸ್ಪೀಕರ್ ನನಗೆ ಉತ್ತರ ನೀಡಬೇಕು. ವಾಚ್ ಪ್ರಕರಣಕ್ಕೆ ಸಂಬಂಧಿಸಿ ಇಡಿಗೆ ಸಲ್ಲಿಕೆಯಾಗಿರುವ ದೂರಿನ ಸ್ಥಿತಿ ಏನಾಗಿದೆ ಎಂಬ ಬಗ್ಗೆ ಮಾಹಿತಿ ನೀಡಬೇಕು ಎಂದು ಒತ್ತಾಯಿಸಿದ್ದಾರೆ.