ರಾಮನಗರ: ನಿಸ್ವಾರ್ಥ ಸೇವೆ ಹಾಗೂ ಕರ್ತವ್ಯ ನಿಷ್ಟೆ ತೋರಿದ ಪೊಲೀಸರನ್ನು ನೆನೆಯುವ ನಿಟ್ಟಿನಲ್ಲಿ ಪ್ರತಿ ವರ್ಷ ಏಪ್ರಿಲ್ ೨ ರಂದು ಪೊಲೀಸ್ ಧ್ವಜ ದಿನಾಚರಣೆಯನ್ನು ಆಚರಿಸಲಾಗುತ್ತದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ ಅವರು ತಿಳಿಸಿದರು.
ಅವರು ಇಂದು ಚನ್ನಪಟ್ಟಣದ ಪೊಲೀಸ್ ಕವಾಯತು ಮೈದಾನದಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ನಿವೃತ್ತ ಪೊಲೀಸ್ ಅಧಿಕಾರಿಗಳನ್ನು ಸನ್ಮಾನಿಸಿ ಗೌರವಿಸುವ ಉದ್ದೇಶದಿಂದ ಈ ದಿನವನ್ನು ಆಚರಣೆ ಮಾಡಲಾಗುವುದು. ನಾವು ನಮ್ಮ ಕರ್ತವ್ಯದ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕು. ಸಾರ್ವಜನಿಕರೊಂದಿಗೆ ಜನಸ್ನೇಹಿ ಪೊಲೀಸರಾಗಿ ಕರ್ತವ್ಯ ನಿರ್ವಹಿಸುವುದು ಹೆಮ್ಮೆಯ ವಿಷಯವಾಗಿದೆ. ಕಳೆದ ವರ್ಷ ೨೫,೪೦,೦೦೦ ರೂ.ಗಳ ಪೊಲೀಸ್ ಧ್ವಜಗಳನ್ನು ಮಾರಾಟ ಮಾಡಲಾಗಿದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಉಪ ಪೊಲೀಸ್ ವರಿಷ್ಠಾಧಿಕಾರಿ ಸುರೇಶ್, ರಾಮಚಂದ್ರಯ್ಯ, ಡಿವೈಎಸ್ಪಿ ದಿನಕರ ಶೆಟ್ಟಿ, ಗಿರಿ ಹಾಗೂ ಇತರರು ಉಪಸ್ಥಿತರಿದ್ದರು.