ಬೆಂಗಳೂರು : ಬಿಡದಿ ಸೂಪರ್ ಸಿಟಿ ಟೌನ್ಶಿಪ್ ಯೋಜನೆಗೆ ಸಂಬಂಧಿಸಿದ ಭೂಸ್ವಾಧೀನ ಪ್ರಕ್ರಿಯೆ ಇದೀಗ ಕಾಂಗ್ರೆಸ್ ಸರ್ಕಾರ ಮತ್ತು ಬಿಜೆಪಿ ನಡುವಿನ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದ್ದು, ಟೌನ್ಶಿಪ್ ಹೆಸರಿನಲ್ಲಿ ರಾಜ್ಯ ಸರ್ಕಾರ ರೈತರ ಜಮೀನಿನ ಮೇಲೆ ದಬ್ಬಾಳಿಕೆ ನಡೆಸುತ್ತಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ.
ರೈತರಿಗೆ ಯಾವುದೇ ಮಾಹಿತಿ ನೀಡದೆ ಅಧಿಕಾರಿಗಳು ಏಕಾಏಕಿ ಕೃಷಿ ಭೂಮಿಗೆ ತೆರಳಿ ಜಂಟಿ ಮಾಪನ (JMC) ನಡೆಸಲು ಮುಂದಾಗಿದ್ದಾರೆ. ಇದನ್ನು ಪ್ರಶ್ನಿಸಿದ ರೈತರ ಮೇಲೆಯೇ ಎಫ್ಐಆರ್ ದಾಖಲಿಸಿ, ಬಂಧಿಸುವ ಮೂಲಕ ಸರ್ಕಾರ ಹೋರಾಟವನ್ನು ಹತ್ತಿಕ್ಕಲು ಯತ್ನಿಸುತ್ತಿದೆ ಎಂದು ಅಶೋಕ್ ದೂರಿದ್ದಾರೆ.
ರೈತರ ಹಿತ ಕಾಪಾಡಬೇಕಾದ ಸರ್ಕಾರವೇ ಪೊಲೀಸ್ ಬಲ ಬಳಸಿ ಶಾಂತಿಯುತ ಪ್ರತಿಭಟನೆಯನ್ನು ಹತ್ತಿಕ್ಕುತ್ತಿರುವುದು ಪ್ರಜಾಪ್ರಭುತ್ವ ವಿರೋಧಿ ನಡೆ ಎಂದು ಅವರು ಟೀಕಿಸಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ ಅಶೋಕ್, ರೈತರ ಮೇಲಿನ ಪ್ರಕರಣಗಳನ್ನು ತಕ್ಷಣವೇ ಹಿಂಪಡೆಯಬೇಕು ಹಾಗೂ ವಶಕ್ಕೆ ಪಡೆದಿರುವ ರೈತರನ್ನು ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ಸರ್ಕಾರ 48 ಗಂಟೆಗಳ ಒಳಗೆ ಕ್ರಮ ಕೈಗೊಳ್ಳದಿದ್ದರೆ, ರಾಜ್ಯದ ರೈತರನ್ನು ಸಂಘಟಿಸಿ ಬಿಜೆಪಿ ವತಿಯಿಂದ ಬೃಹತ್ ಹೋರಾಟ ನಡೆಸಲಾಗುವುದು ಎಂದು ಆರ್.ಅಶೋಕ್ ಎಚ್ಚರಿಕೆ ನೀಡಿದ್ದಾರೆ.



