ಮಂಡ್ಯ: ಜಿಲ್ಲೆಯಲ್ಲಿ ಹೆಣ್ಣು ಭ್ರೂಣ ಹತ್ಯೆ ತಡೆಯಲು ಗ್ರಾಮ ಮಟ್ಟದಲ್ಲಿ ಜಾಗೃತಿ ಕಾರ್ಯಕ್ರಮ ಆಯೋಜಿಸಲು ಯೋಜನೆ ಸಿದ್ಧಪಡಿಸಿ ಎಂದು ಜಿಲ್ಲಾಧಿಕಾರಿ ಡಾ: ಕುಮಾರ ಅವರು ತಿಳಿಸಿದರು. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಅಧಿಕಾರಿಗಳು ಹಾಗೂ ಮಹಿಳಾ ಸ್ವಯಂ ಸೇವಾ ಸಂಸ್ಥೆಗಳ ಸದಸ್ಯರೊಂದಿಗೆ ಸಭೆ ನಡೆಸಿ ಮಾತನಾಡಿದರು. ಪಿ.ಸಿ.ಪಿ.ಡಿ.ಎನ್ ಟಿ ಕಾಯ್ದೆಯ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಿ, ಸ್ಕ್ಯಾನಿಂಗ್ ಸೆಂಟರ್, ಸಾರ್ವಜನಿಕ ಸ್ಥಳಗಳಲ್ಲಿ ಪೋಸ್ಟರ್ ಗಳನ್ನು ಅಳವಡಿಸಿ ಎಂದರು.
ಡಿ.೨೦ ರಂದು ಜಿಲ್ಲಾ ಮಟ್ಟದ ಅರಿವು ಕಾರ್ಯಕ್ರಮ ಜಿಲ್ಲಾ, ತಾಲ್ಲೂಕು, ಪಿ.ಹೆಚ್.ಸಿ ಮಟ್ಟದಲ್ಲಿ ಅರಿವು ಕಾರ್ಯಕ್ರಮ ಆಯೋಜಿಸಲು ದಿನಾಂಕದೊಂದಿಗೆ ಯೋಜನೆ ಸಿದ್ಧವಾಗಬೇಕು. ಜಿಲ್ಲಾ ಮಟ್ಟದಲ್ಲಿ ಡಿಸೆಂಬರ್ ೨೦ ರಂದು ನಡೆಯುವ ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳನ್ನು ಆಹ್ವಾನಿಸಿ ಎಂದರು. ಸಾರ್ವಜನಿಕರಿಗೆ ಅರಿವು ಮೂಡಿಸುವ ಕಾರ್ಯಕ್ರಮ ನಿರಂತರವಾಗಿ ನಡೆಯಬೇಕು. ಆರೋಗ್ಯ ಇಲಾಖೆಯಲ್ಲಿ ಲಭ್ಯವಿರುವ ಐ.ಇ.ಸಿ ಅನುದಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಿ. ಜಿಲ್ಲೆಯಲ್ಲಿರುವ ಮಹಿಳಾ ಸಂಘಟನೆಗಳು, ಸ್ವಯಂ ಸೇವಾ ಸಂಸ್ಥೆಗಳು, ಸ್ಥಳೀಯ ಜನಪ್ರತಿನಿಧಿಗಳನ್ನು ಅರಿವು ಕಾರ್ಯಕ್ರಮಗಳಿಗೆ ಆಹ್ವಾನಿಸಿ ಎಂದರು.
ಸಹಾಯವಾಣಿ ಜಿಲ್ಲೆಯಲ್ಲಿ ಹೆಣ್ಣು ಭ್ರೂಣ ಹತ್ಯೆಗೆ ಸಂಬಂಧಿಸಿದಂತೆ ದೂರು ಸ್ವೀಕರಿಸಲು ಹಾಗೂ ಆರೋಗ್ಯ ಇಲಾಖೆಯಿಂದ ನೀಡಲಾಗುವ ಸೇವೆಗಳಿಗೆ ಸಂಬಂಧಿಸಿದಂತೆ ಪ್ರತ್ಯೇಕವಾಗಿ ಜಿಲ್ಲಾ ಮಟ್ಟದಲ್ಲಿ ಟೋಲ್ ಫ್ರೀ ಸಹಾಯವಾಣಿ ಸ್ಥಾಪಿಸಲು ಚಿಂತನೆ ನಡೆಸಿ ಎಂದರು. ಸ್ಕ್ಯಾನಿಂಗ್ ಸೆಂಟರ್ ಗಳಿಗೆ ದಿಢೀರ್ ಭೇಟಿ ಪ್ರತಿ ಮೂರು ತಿಂಗಳಿಗೊಮ್ಮೆ ಪಿ.ಸಿ.ಪಿ.ಡಿ.ಎನ್ ಟಿ ಸಮಿತಿ ಸ್ಕ್ಯಾನಿಂಗ್ ಸೆಂಟರ್ ಗೆ ಭೇಟಿ ನೀಡಿ ವರದಿ ನೀಡಬೇಕಿರುತ್ತದೆ. ಸಮಿತಿ ಇನ್ನೂ ಮುಂದೆ ದಿಢೀರ್ ಭೇಟಿ ನೀಡಿ ವರದಿ ನೀಡಬೇಕು ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ. ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್ ಅವರು ಮಾತನಾಡಿ ಹೆಣ್ಣು ಭ್ರೂಣ ಹತ್ಯೆ ತಡೆಗಟ್ಟಲು ಸಾರ್ವಜನಿಕರು ಸಹ ಜಿಲ್ಲಾಡಳಿತದೊಂದಿಗೆ ಕೈಜೋಡಿಸಬೇಕು. ಇಂತಹ ಕೃತ್ಯ ಕಂಡು ಬಂದಲ್ಲಿ ನೇರವಾಗಿ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿ ಎಂದರು. ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ: ಮೋಹನ್, ಆರೋಗ್ಯ ಇಲಾಖೆಯ ಡಾ: ಬೆಟ್ಟಸ್ವಾಮಿ, ಹಿರಿಯ ವಕೀಲರಾದ ಜಯಲಕ್ಷ್ಮಿ, ಮಹಿಳಾ ಸಂಘಟನೆಯ ಮುಖ್ಯಸ್ಥರಾದ ಸುನಂದ ಜಯರಾಂ, ಕುಮಾರಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.