ಬೆಳಗಾವಿ: ಉತ್ತರ ಕರ್ನಾಟಕದ ಅಭಿವೃದ್ಧಿಗಾಗಿ ಪ್ರತ್ಯೇಕ ಬಜೆಟ್ ಮಂಡಿಸುವಂತೆ ಜೆಡಿಎಸ್ ಶಾಸಕ ಶರಣಗೌಡ ಕುಂದಕೂರ್ ಆಗ್ರಹಿಸಿದ್ದಾರೆ. ಈ ಬಗ್ಗೆ ಸದನದಲ್ಲಿ ಮಾತನಾಡಿದ ಅವರು, ದಕ್ಷಿಣ ಕರ್ನಾಟಕದಲ್ಲಿ ಸಾಧಿಸಿದ ಪ್ರಗತಿಯ ಬಗ್ಗೆ ನನಗೆ ಯಾವುದೇ ರೀತಿಯ ಅಸೂಯೆ ಇಲ್ಲ. ಆದರೆ, ಉತ್ತರ ಕರ್ನಾಟಕದ ಅಭಿವೃದ್ಧಿಗೆ ಒತ್ತು ನೀಡದಿರುವುದು ಕಳವಳ ತಂದಿದೆ. ಇಲ್ಲಿನ ಪ್ರಸ್ತುತ ಸ್ಥಿತಿಗೆ ಜನರು ಹಾಗೂ ಚುನಾಯಿತ ಪ್ರತಿನಿಧಿಗಳು ಎಲ್ಲರೂ ಹೊಣೆಗಾರರಾಗಿರುತ್ತಾರೆಂದು ಹೇಳಿದ್ದಾರೆ.
ಇನ್ನೂ 7-8 ಬಾರಿ ಆಯ್ಕೆಯಾದ ಸದಸ್ಯರು ಈ ಪ್ರದೇಶದ ಅಭಿವೃದ್ಧಿಯ ಬಗ್ಗೆ ಕಳವಳ ವ್ಯಕ್ತಪಡಿಸುತ್ತಲೇ ಇದ್ದಾರೆ. ಹಲವು ಬಾರಿ ಆಯ್ಕೆಯಾದ ಸದಸ್ಯರ ಪರಿಸ್ಥಿತಿ ಹೀಗಿದ್ದರೆ, ಮೊದಲ ಬಾರಿಗೆ ಆಯ್ಕೆಯಾದವರ ಸ್ಥಿತಿ ಏನಾಗಬಹುದು? ಎಂದು ಪ್ರಶ್ನಿಸಿದ್ದಾರೆ.
ಈ ವೇಳೆ ಉತ್ತರ ಕರ್ನಾಟಕಕ್ಕೆ ಸರ್ಕಾರ ಪ್ರತ್ಯೇಕ ಬಜೆಟ್ ಮಂಡಿಸಬೇಕು, ಕನಿಷ್ಠ ಐದು ವರ್ಷಗಳ ಕಾಲ 1.5 ರಿಂದ 2 ಲಕ್ಷ ಕೋಟಿ ರೂ.ಗಳನ್ನು ಮೀಸಲಿಡಬೇಕು. ಮಂಡಿಸಲಾದ ಬಜೆಟ್ ಒಂದು ವರ್ಷಕ್ಕೆ ಒಂದೇ ವಿಷಯದ ಮೇಲೆ ಕೇಂದ್ರೀಕರಿಸಬೇಕು. ಮೊದಲ ವರ್ಷ ಶಿಕ್ಷಣದ ಮೇಲೆ ಕೇಂದ್ರೀಕರಿಸಿದರೆ, ನಂತರದ ವರ್ಷಗಳಲ್ಲಿ ಆರೋಗ್ಯ, ನೀರಾವರಿ, ಕುಡಿಯುವ ನೀರು ಮತ್ತು ಮೂಲಸೌಕರ್ಯದ ಮೇಲೆ ಕೇಂದ್ರೀಕರಿಸಬೇಕು. ಇಂತಹ ಕ್ರಮಗಳಿಂದ ಮಾತ್ರ, ಈ ಪ್ರದೇಶದ ಅಭಿವೃದ್ಧಿಯಾಗದ ಸಮಸ್ಯೆಯನ್ನು ಪರಿಹರಿಸಬಹುದು.
ಕೈಗಾರಿಕೆ, ಸಣ್ಣ ಪ್ರಮಾಣದ ಕೈಗಾರಿಕೆ, ಐಟಿ-ಬಿಟಿ ಮತ್ತು ಕೌಶಲ್ಯ ಅಭಿವೃದ್ಧಿ ಸಚಿವರು ಈ ಪ್ರದೇಶದವರೇ ಆಗಿದ್ದರೂ, ಕೈಗಾರಿಕಾ ಕ್ಷೇತ್ರದ ಅಭಿವೃದ್ಧಿ ಶೋಚನೀಯವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಇದೇ ವೇಳೆ ಈ ಪ್ರದೇಶದ ಕಬ್ಬು ಮತ್ತು ಮೆಕ್ಕೆಜೋಳ ಬೆಳೆಗಾರರ ಸಮಸ್ಯೆಯ ಬಗ್ಗೆ ದ್ವನಿ ಎತ್ತಿದ ಮಾಜಿ ಸಚಿವ ಲಕ್ಷ್ಮಣ್ ಸವದಿ, ಕೇಂದ್ರ ಸರ್ಕಾರದ ನೀತಿಗಳೇ ಇದಕ್ಕೆ ಕಾರಣ ಎಂದು ಆರೋಪಿಸಿದರು.



