ಮೈಸೂರು: ಪ್ರಗತಿಪರ ಚಿಂತಕ, ಮೈಸೂರು ವಿಶ್ವವಿದ್ಯಾಲಯ ಮಾನಸ ಗಂಗೋತ್ರಿಯ ಸಮೂಹ ಸಂವಹನ ಹಾಗೂ ಪತ್ರಿಕೋದ್ಯಮ ವಿಭಾಗದ ನಿವೃತ್ತ ಮುಖ್ಯಸ್ಥ ಪ್ರೊ.ಮಹೇಶ್ ಚಂದ್ರಗುರು (೬೮) ಶನಿವಾರ ವಿಜಯನಗರ ೨ನೇ ಹಂತದಲ್ಲಿರುವ ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನರಾದರು.
ಅವರಿಗೆ ಪ್ರಾಧ್ಯಾಪಕರೂ ಆಗಿರುವ ಪತ್ನಿ ಹೇಮಾವತಿ, ಸಹೋದರ ಮತ್ತು ಸಹೋದರಿ ಇದ್ದಾರೆ. ಹಲವು ದಿನಗಳಿಂದ ವಯೋಸಹಜ ಅನಾರೋಗ್ಯ ಹಾಗೂ ಕಾಲು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದರು. ಅವರ ಅಂತ್ಯಕ್ರಿಯೆ ಭಾನುವಾರ (ಆ.೧೮) ಅವರ ಸ್ವಂತ ಊರು ಗುಂಡ್ಲುಪೇಟೆಯಲ್ಲಿ ಇಂದು ಸಂಜೆ 6 ಗಂಟೆಗೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಮಧ್ಯಾಹ್ನ 2 ಗಂಟೆವರೆಗೆ ಅವರ ವಿಜಯನಗರ ಎರಡನೇ ಹಂತದಲ್ಲಿರುವ ಅವರ ಸ್ವಗೃಹದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.
ಮೂಲತಃ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆಯವರಾದ ಅವರು, ಮೈಸೂರು ವಿಶ್ವವಿದ್ಯಾಲಯದಿಂದ ೧೯೮೦ರಲ್ಲಿ ಸಮೂಹ ಸಂವಹನ ಹಾಗೂ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ, ಬಳಿಕ ಮಂಗಳೂರು ವಿವಿಯಿಂದ ಅಭಿವೃದ್ಧಿ ಸಂವಹನ ವಿಷಯದಲ್ಲಿ ಪಿ.ಎಚ್.ಡಿ. ಪದವಿ ಗಳಿಸಿದ್ದರು. ಮೈಸೂರಿನ `ಪಂಚಮ’ ಪತ್ರಿಕೆಯಲ್ಲಿ ಪತ್ರಕರ್ತರಾಗಿಯೂ ಕೆಲಸ ಮಾಡಿದ್ದರು.
ಅಂಬೇಡ್ಕರ್ ಅನುಯಾಯಿಯಾಗಿದ್ದ ಅವರು, ಹಲವು ಪ್ರಗತಿಪರ ಹಾಗೂ ಸಾಮಾಜಿಕ ಹೋರಾಟಗಳಲ್ಲಿ ಮುಂಚೂಣಿಯಲ್ಲಿದ್ದರು. ಪ್ರಖರ ಹೇಳಿಕೆಗಳಿಂದ ವಿವಾದಕ್ಕೆ ಒಳಗಾಗಿದ್ದರು. ಎಡಪಂಥೀಯ ಚಿಂತನೆಯನ್ನು ಪ್ರತಿಪಾದಿಸುತ್ತಾ ಸಾಮಾಜಿಕ ಅಸಮಾನತೆಯನ್ನು ಖಂಡಿಸುತ್ತಿದ್ದರು. ನಾಡಹಬ್ಬ ದಸರಾ ಆಚರಣೆ ವೇಳೆ, ಇತ್ತೀಚಿನ ವರ್ಷಗಳಲ್ಲಿ ಕೆಲವು ಸಂಘಟನೆಗಳು ಸೇರಿ ನಡೆಸುತ್ತಿರುವ ಮಹಿಷ ದಸರಾ ಆಚರಣೆಯಲ್ಲಿ ಪ್ರಮುಖ ಪಾತ್ರವನ್ನು ವಹಿಸಿದ್ದರು. ಪ್ರಖರ ಚಿಂತಕರಾಗಿಯೂ ಗುರುತಿಸಿಕೊಂಡಿದ್ದರು. ಶೋಷಿತರು ಹಾಗೂ ಹಿಂದುಳಿದ ವರ್ಗದ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಮುಂದೆ ಬರಲೆಂದು ಹೆಚ್ಚಿನ ಪ್ರೋತ್ಸಾಹ ನೀಡುತ್ತಿದ್ದರು.
ದಲಿತ, ರೈತ, ಬಂಡಾಯ ಚಳವಳಿಗಳಲ್ಲೂ ಸಕ್ರಿಯವಾಗಿದ್ದರು. ಸಮೂಹ ಸಂವಹನ, ಪತ್ರಿಕೋದ್ಯಮ, ಮಹಿಳಾ ಸಾಹಿತ್ಯ, ಬೌದ್ಧ ಸಾಹಿತ್ಯ, ಅಂಬೇಡ್ಕರ್ ಸಾಹಿತ್ಯ ಮೊದಲಾದ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ೨೩ ಕನ್ನಡ ಹಾಗೂ ಇಂಗ್ಲಿಷ್ ಕೃತಿಗಳನ್ನು ರಚಿಸಿದ್ದರು. ೧೨೦ ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ವಿಚಾರಸಂಕಿರಣಗಳಲ್ಲಿ ಪ್ರಬಂಧ ಮಂಡಿಸಿದ್ದಾರೆ. ೨೦೦ಕ್ಕೂ ಹೆಚ್ಚು ಲೇಖನಗಳು ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ನಿಯತಕಾಲಿಕೆಗಳಲ್ಲಿ ಪ್ರಕಟಗೊಂಡಿವೆ. ಅವರ ಮಾರ್ಗದರ್ಶನದಲ್ಲಿ ೩೨ ಸಂಶೋಧನಾ ವಿದ್ಯಾರ್ಥಿಗಳು ಸಂವಹನ ಮತ್ತು ಪತ್ರಿಕೋದ್ಯಮ ವಿಷಯದಲ್ಲಿ ಪಿಎಚ್ಡಿ ಪದವಿ ಪಡೆದಿದ್ದಾರೆ.