ರಾಮನಗರ: ಲೋಕಸಭಾ ಸಾರ್ವತ್ರಿಕ ಚುನಾವಣೆ-೨೦೨೪ರ ಸಂಬಂಧ ೨೩-ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಕ್ಕೆ ಇದೇ ಏ. ೨೬ರ ಶುಕ್ರವಾರ ಮತದಾನ ನಡೆಯಲಿದ್ದು, ರಾಮನಗರ ಜಿಲ್ಲೆಯಲ್ಲಿ ೪ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಅಭ್ಯರ್ಥಿಗಳು ಹಾಗೂ ಅವರ ಬೆಂಬಲಿಗರು ಮತಗಳನ್ನು ಯಾಚಿಸುವ ಸಂದರ್ಭಗಳಲ್ಲಿ ಪರಸ್ಪರ ಘರ್ಷಣೆಗಳು ಉಂಟಾಗಿ ಸಾರ್ವಜನಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟಾಗುವ ಸಂಭವಗಳು ಹೆಚ್ಚಾಗಿರುತ್ತವೆ.
ಆದ್ದರಿಂದ ಮುಕ್ತ ಮತ್ತು ನ್ಯಾಯಯುತ ಹಾಗೂ ನಿಷ್ಪಕ್ಷಪಾತವಾಗಿ ಚುನಾವಣೆಯನ್ನು ನಡೆಸುವ ದೃಷ್ಠಿಯಿಂದ ಮತದಾನ ಮುಕ್ತಾಯದ ಮುಂಚಿನ ೪೮ ಗಂಟೆಗಳ ಅವಧಿಯಲ್ಲಿ ಯಾವುದೇ ಬಹಿರಂಗ ಸಭೆ ಸಮಾರಂಭಗಳನ್ನು ಮಾಡಲು ಅವಕಾಶವಿರುವುದಿಲ್ಲ. ಈ ಅವಧಿಯಲ್ಲಿ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಹಿಸಬೇಕಾಗಿರುವುದರಿಂದ ಬಹಿರಂಗ ಸಭೆ ಸಮಾರಂಭಗಳನ್ನು ನಿರ್ಬಂಧಿಸಿ ನಿಬಂಧನೆಗಳಿಗೆ ಒಳಪಟ್ಟು ರಾಮನಗರ ಜಿಲ್ಲೆಯಾದ್ಯಂತ ನಿಷೇದಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ಡಾ. ಅವಿನಾಶ್ ಮೆನನ್ ರಾಜೇಂದ್ರನ್ ಅವರು ಆದೇಶಿಸಿದ್ದಾರೆ.
ನಿಷೇಧಿತ ಅವಧಿಯಲ್ಲಿ ಯಾವುದೇ ಬಹಿರಂಗ, ಸಾರ್ವಜನಿಕ ಸಭೆ, ಸಮಾರಂಭ, ಜಾಥಾ, ಮೆರವಣಿಗೆ ಇತ್ಯಾದಿಗಳನ್ನು ನಡೆಸುವುದು ನಿರ್ಬಂಧಿಸಿದೆ. ಈ ಅವಧಿಯಲ್ಲಿ ೫ ಜನರಿಗಿಂತ ಹೆಚ್ಚು ಜನರು ಒಟ್ಟಿಗೆ ಗುಂಪಾಗಿ ಸೇರುವುದನ್ನು ನಿಷೇಧಿಸಲಾಗಿದೆ. ಮತದಾನ ಮುಕ್ತಾಯದ ಮುಂಚಿನ ೪೮ ಗಂಟೆಗಳ ಅವಧಿಯಲ್ಲಿ ಯಾವುದೇ ಬಹಿರಂಗ ಪ್ರಚಾರ ಸಭೆ, ಸಮಾರಂಭ ಮತ್ತು ಮೆರವಣಿಗೆ ನಡೆಸುವುದನ್ನು ನಿಷೇಧಿಸಲಾಗಿರುತ್ತದೆಯೇ ವಿನಃ ಅಭ್ಯರ್ಥಿಗಳ ಬೆಂಬಲಿಗರು ಚುನಾವಣಾ ಪ್ರಚಾರಕ್ಕಾಗಿ ಮನೆಮನೆಗೆ ಮತಗಳನ್ನು ಯಾಚಿಸಲು ಕೇವಲ ೫ ಜನರು ಮಾತ್ರ ಹೋಗತಕ್ಕದ್ದು. ನಿಷೇದಾಜ್ಞೆ ಅವಧಿಯಲ್ಲಿ ಯಾವುದೇ ಸ್ಫೋಟಕ ವಸ್ತುಗಳು, ಮಾರಕಾಸ್ತ್ರಗಳನ್ನು ಕೊಂಡೊಯ್ಯುವುದಾಗಲಿ ಅಥವಾ ಮಾರಕಾಸ್ತ್ರಗಳನ್ನು ಹಿಡಿದು ಓಡಾಡುವಂತಿಲ್ಲ. ಯಾವುದೇ ರೀತಿಯ ಪ್ರಚಾರಗಳನ್ನು ಅಂದರೆ ಭಿತ್ತಿ ಪತ್ರ ಹಂಚುವ ಮೂಲಕ ವಾಹನದಲ್ಲಿ ಪ್ರಚಾರ ಮಾಡುವಂತಹ, ಘೋಷಣೆ ಕೂಗುವಂತಹ, ಭಾಷಣ ಮಾಡುವಂತಹ ಚಟುವಟಿಕೆಗಳನ್ನು ನಿಷೇಧಿಸಿದೆ.
ಈ ನಿಷೇದಾಜ್ಞೆಯು ಮದುವೆ, ಮುಂಜಿ, ಶವಸಂಸ್ಕಾರ ಕಾರ್ಯಕ್ರಮಗಳಿಗೆ ಅನ್ವಯವಾಗುವುದಿಲ್ಲ. ಆದರೆ ಈ ಕಾರ್ಯಕ್ರಮಗಳಲ್ಲಿ ಚುನಾವಣೆಗೆ ಸಂಬಂಧಿಸಿದಂತೆ ಯಾವುದೇ ಕಾರ್ಯಗಳನ್ನು ನಡೆಸುವಂತಿಲ್ಲ. ಯಾವುದೇ ರೀತಿಯ ಮತೀಯ ಭಾವನೆಗಳನ್ನು ಕೆರಳಿಸುವಂತಹ ಪ್ರಚೋದನಕಾರಿ ಹೇಳಿಕೆಗಳನ್ನು ನೀಡುವುದು, ಘೋಷಣೆ ಕೂಗುವುದು ಹಾಗೂ ಭಿತ್ತಿ ಪತ್ರಗಳನ್ನು ಪ್ರಕಟಿಸುವುದು ಮಾಡತಕ್ಕದ್ದಲ್ಲ. ಶಾಂತಿ ಮತ್ತು ಸಾಮಾಜಿಕ ಸಾಮರಸ್ಯಕ್ಕೆ ಭಂಗವುಂಟು ಮಾಡುವ ಸುಳ್ಳು ವದಂತಿಗಳನ್ನು ಹಬ್ಬಿಸಬಾರದು. ಸಾರ್ವಜನಿಕ ಪ್ರಾಣ ಮತ್ತು ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಹಾನಿ ಉಂಟಾಗುವ ರೀತಿಯಲ್ಲಿ ವರ್ತಿಸತಕ್ಕದ್ದಲ್ಲ.
ನಿಷೇದಾಜ್ಞೆ ಅವಧಿಯಲ್ಲಿ ಯಾವುದೇ ಸಭೆ ಸಮಾರಂಭ ಮತ್ತು ಮೆರವಣಿಗೆ ಮಾಡುವಂತಿಲ್ಲ ಹಾಗೂ ಧ್ವನಿವರ್ದಕಗಳನ್ನು ಬಳಸುವಂತಿಲ್ಲ. ಈ ನಿಬಂಧನೆಗಳು ಉಲ್ಲಂಘಿಸಿದವರ ವಿರುದ್ಧ ಕಾನೂನು ರೀತಿಯ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.