ವರದಿ: ವಿನಯ್ ದೊಡ್ಡಕೊಪ್ಪಲು
ಕೆ.ಆರ್.ನಗರ: ದೇಶದ ಪ್ರಾಮಾಣಿಕ ರಾಜಕಾರಣಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಪ್ರಾ ಸಿಕ್ಯೂಸನ್ಗೆ ಅನುಮತಿ ನೀಡಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಥ್ ವಿರುದ್ಧ ತಾಲೂಕಿನ ಮಂಚನಹಳ್ಳಿ ಗ್ರಾಮದ ಸಿದ್ದರಾಮಯ್ಯ ಅಭಿಮಾನಿಗಳು ಮತ್ತು ಗ್ರಾಮಸ್ಥರು ರಸ್ತೆ ತಡೆ ನಡೆಸಿ ಪ್ರತಿಭಟನೆ ಮಾಡಿದರು.
ಹಾಸನ ಮೈಸೂರು ರಸ್ತೆಯಲ್ಲಿ ವಾಹನಗಳನ್ನು ತಡೆದು ರಸ್ತೆ ಮಧ್ಯೆ ಟೈರಿಗೆ ಬೆಂಕಿ ಹಚ್ಚಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ ಅವರುಗಳು ರಾಜ್ಯಪಾಲರ ಜೊತೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಮೊಳಗಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಎಂ. ಎಸ್. ಅನಂತ ರಾಜಕೀಯ ದುರುದ್ದೇಶದಿಂದ ರಾಜ್ಯಪಾಲರು ಮುಖ್ಯಮಂತ್ರಿಗಳ ವಿರುದ್ಧ ತನಿಖೆಗೆ ಅನುಮತಿ ನೀಡಿದ್ದು ಇದರಲ್ಲಿ ಯಾವುದೇ ಹುರುಳಿಲ್ಲ ಹಾಗಾಗಿ ಈ ವಿಚಾರವನ್ನು ರಾಜ್ಯದ ಜನರು ಗಮನಿಸುತ್ತಿದ್ದು ಭವಿಷ್ಯದಲ್ಲಿ ಬಿಜೆಪಿ ಪಕ್ಷದವರಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.
ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ, ಮಾಜಿ ಸಚಿವರಾದ ಮುರುಗೇಶ್ ನಿರಾಣಿ ಜಿ. ಜನಾರ್ದನರೆಡ್ಡಿ, ಶಶಿಕಲಾ ಜೊಲ್ಲೆ ಸೇರಿದಂತೆ ಇತರರ ವಿರುದ್ಧವೂ ತನಿಖೆ ನಡೆಸುವಂತೆ ಅನುಮತಿ ಕೋರಿ ರಾಜ್ಯಪಾಲರಿಗೆ ವರ್ಷಗಳ ಹಿಂದೆಯೇ ಮನವಿ ಮಾಡಿದ್ದರು ಅದನ್ನು ನಿರ್ಲಕ್ಷಿಸಿರುವ ಅವರು ಈಗ ಏಕಾಏಕಿ ಸಿದ್ದರಾಮಯ್ಯನವರ ವಿರುದ್ಧ ನೀತಿಗೆಟ್ಟ ರಾಜಕಾರಣ ಮಾಡಿ ಸಾಂವಿಧಾನಿಕ ಹುದ್ದೆಯನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ದೂರಿದರು.
ಬಡವರು ಹಿಂದುಳಿದವರು ಮತ್ತು ದಲಿತರ ಪರವಾಗಿ ಕೆಲಸ ಮಾಡುತ್ತಾ ರಾಜ್ಯದ ಅಭಿವೃದ್ಧಿಗೆ ತಮ್ಮ ಜೀವನವನ್ನು ಮುಡುಪಾಗಿಟ್ಟಿರುವ ಸಿದ್ದರಾಮಯ್ಯನವರ ಹಿಂದೆ ರಾಜ್ಯದ ಜನತೆ ಹೆಬ್ಬಂಡೆಯಂತೆ ನಿಂತಿದ್ದು ಅವರನ್ನು ಯಾರಿಂದಲೂ ಏನು ಮಾಡಲು ಸಾಧ್ಯವಿಲ್ಲ ಎಂದವರು ತಿಳಿಸಿದರು.
ರಾಜ್ಯ ಹೆದ್ದಾರಿಯಲ್ಲಿ ರಸ್ತೆ ತಡೆ ನಡೆಸಿದ್ದರಿಂದ ವಾಹನ ಸಂಚಾರಕ್ಕೆ ತೊಂದರೆಯಾಯಿತು ಈ ಸಂದರ್ಭದಲ್ಲಿ ಸ್ಳಳಕ್ಕಾಗಮಿಸಿದ ಪೊಲೀಸರು ಪ್ರತಿಭಟನಾಕಾರರ ಮನವೊಲಿಸಿದರು.
ಈ ಸಂಧರ್ಭದಲ್ಲಿ ಮುಖಂಡರಾದ ಮಂಚನಹಳ್ಳಿಧನು, ಅನಂತ, ರಮೇಶ್, ಮಹದೇವ, ಶಂಕರ್, ರವಿ, ಮಂಜು, ಕಾಳೇಗೌಡ, ವೀರಭದ್ರ, ಎಂ.ಎಸ್.ಮಂಜು, ಬೋರಣ್ಣ, ಗಜ, ಅಭಿಷೇಕ್, ರಾಜೇಶ್ , ರಮೇಶ್, ಅವಿನಾಶ್, ರಾಘು, ಮತ್ತು ಗ್ರಾಮದ ಲೋಡರ್ಸ್ ಸಂಘದವರು ಇದ್ದರು.