ನವದೆಹಲಿ: ಕರ್ನಾಟಕದಲ್ಲಿ ಜಾತಿ ಗಣತಿ ವರದಿಯನ್ನು ಕೂಡಲೇ ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಗೆ ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಮನವಿ ಮಾಡಿದರು.
ಉಭಯ ನಾಯಕರನ್ನು ಹೊಸದಿಲ್ಲಿಯಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದ ಅವರು, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ೧೬೦ ಕೋಟಿ ರೂ. ಖರ್ಚು ಮಾಡಿ ಜಾತಿ ಗಣತಿ ವರದಿಯನ್ನು ೨೦೧೮ರಲ್ಲೇ ಸಿದ್ಧಪಡಿಸಿದೆ. ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ, ಬಿಜೆಪಿ ಸರ್ಕಾರದ ಅವಧಿಯಲ್ಲಿ ಈ ವರದಿ ಬಿಡುಗಡೆಯಾಗಲಿಲ್ಲ. ನಮ್ಮ ಸರ್ಕಾರ ಬಂದು ಒಂದೂವರೆ ವರ್ಷ ಕಳೆದಿದೆ. ಜಾತಿ ಗಣತಿ ವರದಿ ಬಿಡುಗಡೆ ನಮ್ಮ ಸರ್ಕಾರದ ಆದ್ಯತೆ ಆಗಬೇಕಿತ್ತು. ಆದರೆ, ಅನಗತ್ಯ ವಿಳಂಬ ಮಾಡಲಾಗುತ್ತಿದೆ. ಇದು ಸರಿಯಲ್ಲ. ಈ ಸಂಬಂಧ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಬೇಕು’ ಎಂದು ಕೋರಿದರು.