ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಆರೋಪದಲ್ಲಿ ನಟ ದರ್ಶನ್ ಬಂಧನವಾಗಿ ಮೂರು ತಿಂಗಳಾಗುತ್ತಾ ಬಂದಿದೆ. ಶೀಘ್ರವೇ ದರ್ಶನ್ ಹಾಗೂ ಪ್ರಕರಣದ ಇತರೆ ಆರೋಪಿಗಳ ವಿರುದ್ಧ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಿದ್ದಾರೆ.
ಇಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನಗರ ಪೊಲೀಸ್ ಆಯುಕ್ತ ದಯಾನಂದ್, ಪ್ರಕರಣದಲ್ಲಿ ನಮ್ಮ ತನಿಖೆ ಪೂರ್ಣಗೊಂಡಿದ್ದು, ಚಾರ್ಜ್ ಶೀಟ್ ಈಗಾಗಲೇ ತಯಾರಾಗಿದೆ. ಆರೋಪ ಪಟ್ಟಿಯನ್ನು ಪಬ್ಲಿಕ್ ಪ್ರಾಸಿಕ್ಯೂಟರ್ ಅವರಿಗೆ ನೀಡಿ ಸಲಹೆಗಳನ್ನು ಪಡೆಯಲಾಗಿದ್ದು, ಅವರು ಕೆಲವು ಬದಲಾವಣೆಗಳನ್ನು ಸೂಚಿಸಿದ್ದಾರೆ. ಆ ಬದಲಾವಣೆಗಳ ಬಳಿಕ ಇನ್ನು ಒಂದು ಅಥವಾ ಎರಡು ದಿನಗಳಲ್ಲಿ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಿದ್ದೇವೆ ಎಂದಿದ್ದಾರೆ.
ವಿಧಿ ವಿಜ್ಞಾನ ಪ್ರಯೋಗಾಲಯದಿಂದ ಇನ್ನೂ ಕೆಲವು ವರದಿಗಳು ಬರಬೇಕಿವೆ. ಬೆಂಗಳೂರಿನ ಎಲ್ಲ ಎಫ್ ಎಸ್ ಎಲ್ ವರದಿಗಳು ಈಗಾಗಲೇ ಕೈ ಸೇರಿವೆ. ಹೈದರಾಬಾದ್ ನ ಎಫ್ ಎಸ್ ಎಲ್ ನಿಂದ ಕೆಲವು ವರದಿಗಳು ಬರಬೇಕಿವೆ. ಆದರೆ ಅವುಗಳ ಹೊರತಾಗಿಯೇ ನಾವು ವರದಿ ಸಲ್ಲಿಕೆ ಮಾಡಲಿದ್ದೇವೆ. ಮುಂದಿನ ದಿನಗಳಲ್ಲಿ ಅವುಗಳನ್ನು ಸೇರಿಸುವ ಅವಕಾಶ ಇದೆ. ಈ ನಾವು ಪ್ರಾಥಮಿಕ ವರದಿಯನ್ನು ಸಲ್ಲಿಸುತ್ತಿದ್ದೇವೆ ಎಂದಿದ್ದಾರೆ.