ಚಾಮರಾಜನಗರ: ಸಾರ್ವಜನಿಕರ ಸಮಸ್ಯೆ ಕೆಲಸಗಳಿಗೆ ವಿಳಂಬ ಮಾಡದೇ ತುರ್ತಾಗಿ ಸ್ಪಂದಿಸಿ ಪರಿಹರಿಸುವ ಕಾರ್ಯವನ್ನು ಅಧಿಕಾರಿಗಳು ನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ ಸಿ.ಟಿ. ಶಿಲ್ಪಾನಾಗ್ ಅವರು ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಅಧಿಕಾರಿಗಳ ಪರಿಚಯ ಮಾಡಿಕೊಂಡು ಪ್ರತಿ ಇಲಾಖೆಗಳ ಮಾಹಿತಿ ಪಡೆದು ಸಭೆ ನಡೆಸಿದ ವೇಳೆ ಮಾತನಾಡಿದ ಜಿಲ್ಲಾಧಿಕಾರಿಯವರು ಜನರು ಅವರ ಕೆಲಸವಾಗಬೇಕೆಂದು ಅಧಿಕಾರಿಗಳ ಮೇಲೆ ಹೆಚ್ಚಿನ ನಿರೀಕ್ಷೆ ಹೊಂದಿರುತ್ತಾರೆ. ಸಾರ್ವಜನಿಕರಿಗೆ ಸ್ಪಂದಿಸಿ ಅವರ ನಿರೀಕ್ಷೆಗೆ ತಕ್ಕಂತೆ ಕೂಡಲೇ ಕೆಲಸ ಮಾಡಿಕೊಡಬೇಕು. ವಿಳಂಬ ಮಾಡಬಾರದು ಎಂದರು. ಪ್ರತೀ ಇಲಾಖೆಗಳ ಅಧಿಕಾರಿಗಳು ಇಲಾಖಾ ವ್ಯಾಪ್ತಿಯ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸಬೇಕು. ಸರ್ಕಾರದ ಸವಲತ್ತುಗಳು ಸಮರ್ಪಕವಾಗಿ ಲಭ್ಯವಾಗಬೇಕು. ಸಕಾರಾತ್ಮಕವಾಗಿ ಹಾಗೂ ಆತ್ಮಸಂತೋಷದಿಂದ ಅಧಿಕಾರಿಗಳು ಕರ್ತವ್ಯ ನಿರ್ವಹಿಸಬೇಕು. ಸವಾಲುಗಳನ್ನು ಸ್ವೀಕರಿಸಿ ಕಾರ್ಯನಿರ್ವಹಿಸುವ ಮನೋಭಾವನೆ ರೂಢಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಯವರು ತಿಳಿಸಿದರು.
ಅಪೌಷ್ಠಿಕತೆ ನಿವಾರಣೆ, ಆರೋಗ್ಯ, ಶಿಕ್ಷಣ, ಮೂಲ ಸೌಕರ್ಯಗಳು ಸೇರಿದಂತೆ ಜನರ ಯಾವುದೇ ಕುಂದು ಕೊರತೆಗಳ ನಿವಾರಣೆ ಕೆಲಸ ಆಗಬೇಕು. ಇಲಾಖೆಯ ಉನ್ನತ ಹಂತದಲ್ಲಿ ಆಗಬೇಕಿರುವ ಕಾರ್ಯಗಳನ್ನು ತಮ್ಮ ಗಮನಕ್ಕೆ ತರಬೇಕು. ಪತ್ರ ವ್ಯವಹಾರ ಮಾಡಿ ಸುಮ್ಮನಿದ್ದರೆ ಆಗುವುದಿಲ್ಲ. ಮುಂದಿನ ಪ್ರಕ್ರಿಯೆಗೆ ಆಗಬೇಕಿರುವ ಕೆಲಸಗಳ ಬಗ್ಗೆ ಹೆಚ್ಚು ಗಮನಹರಿಸಬೇಕು. ಕಾಲಮಿತಿಯೊಳಗೆ ಕಾರ್ಯ ನಿರ್ವಹಿಸಬೇಕು ಎಂದರು. ಅಂಗನವಾಡಿಗಳು, ಹಾಸ್ಟೆಲ್ಗಳಲ್ಲಿ ಸರಿಯಾದ ಸೌಲಭ್ಯಗಳನ್ನು ನೀಡುವ ಮೂಲಕ ಉತ್ತಮವಾಗಿ ನಿರ್ವಹಣೆ ಮಾಡಬೇಕು. ಮಕ್ಕಳ ಕಲಿಕೆಯಲ್ಲಿ ಬದಲಾವಣೆಯಾಗಬೇಕು. ಉತ್ತಮ ಕಲಿಕಾ ಸಾಮಗ್ರಿ, ಸಾಮಥ್ರ್ಯಾಭಿವೃದ್ದಿ, ಉತ್ತೇಜನ ಮಕ್ಕಳಿಗೆ ಅವಶ್ಯವಾಗಿದೆ. ಮೂಲ ಸೌಕರ್ಯ ಬಲಪಡಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಮುಂದಾಗಬೇಕಿದೆ ಎಂದು ಜಿಲ್ಲಾಧಿಕಾರಿಯವರು ತಿಳಿಸಿದರು.
ಇಲಾಖೆಗಳಲ್ಲಿ ಕಡತ ನಿರ್ವಹಣೆ ಸಮರ್ಪಕವಾಗಿರಬೇಕು. ಕಡತಗಳನ್ನು ಬಾಕಿ ಇರಿಸಿಕೊಳ್ಳದೇ ಆಯಾ ನಿಗದಿತ ಅವಧಿಯಲ್ಲಿ ವಿಲೇವಾರಿ ಮಾಡಬೇಕು. ಕೃಷಿ, ತೋಟಗಾರಿಕೆ ಸೇರಿದಂತೆ ವಿವಿಧ ಚಟುವಟಿಕೆಗಳಿಗೆ ಪೂರಕವಾದ ಸೌಲಭ್ಯಗಳಿಗೆ ಕೊರತೆಯಾಗಬಾರದು. ಉದ್ಯೋಗ ಖಾತರಿ ಯೋಜನೆಯನ್ನು ಪರಿಣಾಮಕಾರಿಯಾಗಿ ಜನರು ಬಳಸಿಕೊಳ್ಳುವಂತೆ ಅಗತ್ಯವಿರುವ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಜಿಲ್ಲಾಧಿಕಾರಿ ಸಿ.ಟಿ. ಶಿಲ್ಪಾನಾಗ್ ಅವರು ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಎಸ್. ಪೂವಿತಾ, ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಉಪವಿಭಾಗಾಧಿಕಾರಿ ಮಹೇಶ್, ತಹಶೀಲ್ದಾರರು, ಜಿಲ್ಲೆಯ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.