ಬೆಂಗಳೂರು: ಕರ್ನಾಟಕ ಹೈಕೋರ್ಟ್ ಹಂಗಾಮಿ ಮುಖ್ಯ ನ್ಯಾಯಮೂರ್ತಿಗಳಾಗಿ ಮತ್ತು ಛತ್ತೀಸ್ ಗಡ ಹೈಕೋರ್ಟ್ ನ ನಿವೃತ್ತ ಮುಖ್ಯ ನ್ಯಾಯಮೂರ್ತಿಗಳಾಗಿದ್ದ ಎಸ್.ಆರ್.ನಾಯಕ್ (80) ನಿಧನ ಹೊಂದಿದ್ದಾರೆ. ಅವರು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ, ಮತ್ತು ಕರ್ನಾಟಕ ಕಾನೂನು ಆಯೋಗದ ಮಾಜಿ ಅಧ್ಯಕ್ಷರಾಗಿಯೂ ಕರ್ತವ್ಯ ನಿರ್ವಹಿಸಿದ್ದರು.
ಇವರಿಗೆ “ನಾಡೋಜ” ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. ಇವರು ಪತ್ನಿ ಶಾಲಿನಿ ಎಸ್.ನಾಯಕ್, ಪುತ್ರ ಡಾ.ಎನ್.ಎಸ್.ರಾಹುಲ್, ಪುತ್ರಿ ನಿಶಾ ಗಾಂವ್ಕರ್ ಅವರನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಇಂದು ಸಂಜೆ 4 ಗಂಟೆಗೆ ಹೆಬ್ಬಾಳ ಚಿತಾಗಾರದಲ್ಲಿ ನೆರವೇರಲಿದೆ. ಆರ್.ಎಂ.ವಿ ಎರಡನೇ ಹಂತದ ಡಾಲರ್ಸ್ ಕಾಲೋನಿಯ ನಿವಾಸದಲ್ಲಿ ಮಧ್ಯಾಹ್ನ 1 ಗಂಟೆಯವರೆಗೂ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಅವರ ಕುಟುಂಬ ತಿಳಿಸಿದೆ.
ಎಸ್ ಆರ್ ನಾಯಕ್ ಅವರು ಕುಮಟಾ ತಾಲ್ಲೂಕಿನ ನಾಡಮ್ಯಾಸಕೇರಿ ಗ್ರಾಮದಲ್ಲಿ ಕೃಷಿಕ ಕುಟುಂಬದಲ್ಲಿ 1945ರ ಜನವರಿ 1 ರಂದು ಎಸ್.ಆರ್.ನಾಯಕ್ ಜನಿಸಿದರು.ಮೈಸೂರು ವಿಶ್ವವಿದ್ಯಾಲಯದಿಂದ ಬಿಎಸ್ಸಿ ಪದವಿ, ಬೆಂಗಳೂರು ವಿಶ್ವವಿದ್ಯಾಲಯದಿಂದ ಕಾನೂನು ಮತ್ತು ಸ್ನಾತಕೋತ್ತರ ಪದವಿಯನ್ನೂ ಪಡೆದಿದ್ದರು. 1974ರಲ್ಲಿ ವಕೀಲರಾಗಿ ವೃತ್ತಿ ಆರಮಭಿಸಿದ ಇವರು ಎಂ.ಗೋಪಾಲಕೃಷ್ಣ ಶೆಟ್ಟಿ ಮತ್ತು ಎಲ್.ಜಿ.ಹಾವನೂರು ಅವರ ಬಳಿ ಕಿರಿಯ ವಕೀಲರಾಗಿ ಅನುಭವ ಪಡೆದಿದ್ದರು. ಕೆಲ ಅವಧಿಗೆ ಬೆಂಗಳೂರಿನ ಬಿಎಂಎಸ್ ಮತ್ತು ಎಸ್ ಎಲ್ ಎಸ್ ಆರ್ ಸಿ ಹಾವನೂರು ಕಾನೂನು ಕಾಲೇಜುಗಳಲ್ಲಿ ಅರೆಕಾಲಿಕ ಪ್ರಾಧ್ಯಾಪಕರಾಗಿಯೂ ಕರ್ತವ್ಯ ನಿರ್ವಹಿಸಿದ್ದರು.
ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಯಾಗಿ 1994ರ ಫೆಬ್ರುವರಿ 25ರಂದು ನೇಮಕಗೊಂಡ ಅವರು ನಂತರ ಆಂಧ್ರಪ್ರದೇಶ ಹೈಕೋರ್ಟ್ ಗೆ ವರ್ಗಾವಣೆಯಾಗಿದ್ದರು. ಆಂಧ್ರಪ್ರದೇಶ ನ್ಯಾಯಾಂಗ ಅಕಾಡೆಮಿ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದರು. ನಂತರ ಛತ್ತೀಸ್ ಗಡ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನಿವೃತ್ತರಾಗಿದ್ದರು.