ಧಾರವಾಡ : ಕರ್ನಾಟಕ ರಾಜ್ಯ ಸರಕಾರಿ ನೌಕರ ಸಂಘವು ತುಮಕೂರು ಮಹಾನಗರದಲ್ಲಿ ಆಯೋಜಿಸಿರುವ ರಾಜ್ಯಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದ ಧಾರವಾಡ ಸರಕಾರಿ ನೌಕರ ತಂಡಗಳು ವಿವಿಧ ಸ್ಪರ್ಧೆಗಳಲ್ಲಿ ಪ್ರಶಸ್ತಿ ಪಡೆದಿದ್ದು, ವಿಶೇಷವಾಗಿ ಶಾಲಾ ಶಿಕ್ಷಣ ಇಲಾಖೆಯ ಪ್ರಕಾಶ ಕಂಬಳಿ ನಾಯಕತ್ವದ ಸಿರಿಗಂಧ ಕಲಾ ತಂಡವು ಬಿ.ಆರ್.ಸಿ ಆಗಿರುವ ಜಯಲಕ್ಷ್ಮಿ ಎಚ್. ಮತ್ತು ಸಹ ಕಲಾವಿಧರ ಸಮೂಹ ಜಾನಪದ ನೃತ್ಯವು ರಾಜ್ಯಕ್ಕೆ ಪ್ರಥಮ ಸ್ಥಾನವನ್ನು ಪಡೆದು, ರಾಷ್ಟಮಟ್ಟದ ಸ್ಪರ್ಧೆಗೆ ಆಯ್ಕೆ ಆಗುವ ಮೂಲಕ ಜಿಲ್ಲೆಯ ಕೀರ್ತಿಯನ್ನು ಹೆಚ್ವಿಸಿದ್ದಾರೆ.
ಇವರ ಸಾಧನೆಯನ್ನು ಮೆಚ್ಚಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿ.ಪಂ.ಸಿಇಓ ಸ್ವರೂಪ ಟಿ.ಕೆ, ಡಿಡಿಪಿಐ ಎಸ್.ಎಸ್.ಕೆಳದಿಮಠ ಮತ್ತು ನೌಕರ ಸಂಘದ ಜಿಲ್ಲಾಧ್ಯಕ್ಷ ಎಸ್.ಎಫ್.ಸಿದ್ದನಗೌಡರ ಅಭಿನಂದಿಸಿದ್ದಾರೆ.
ಸಿರಿಗಂಧ ಕಲಾ ತಂಡದ ಪ್ರಕಾಶ ಕಂಬಳಿ ಅವರ ಸಾಹಿತ್ಯ, ಹಾಡು ಮತ್ತು ನಿರ್ದೇಶನದಲ್ಲಿ ಧಾರವಾಡ ಶಹರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಸಮೂಹ ಸಂಪನ್ಮೂಲ ವ್ಯಕ್ತಿ ಆಗಿರುವ ಜಯಲಕ್ಷ್ಮಿ ಎಚ್. ಹಾಗೂ ಸಹ ಕಲಾವಿಧರು ಉತ್ತರ ಕರ್ನಾಟಕದ ಪ್ರಸಿದ್ಧ ಜೋಗುತಿ ಯಲ್ಲಮ್ಮ ಹಾಡಿನೊಂದಿಗೆ ನೃತ್ಯ ಪ್ರದರ್ಶಿಸಿದರು. ಸಮೂಹ ಜಾನಪದ ನೃತ್ಯ ವಿಭಾಗದಲ್ಲಿ ಸುಮಾರು ೩೪ ತಂಡಗಳು ಭಾಗವಹಿಸಿದ್ದವು. ಅವುಗಳಲ್ಲಿ ಉತ್ತಮ ಮತ್ತು ಪ್ರೇಕ್ಷಕರ ಮನಸೆಳೆಯುವಂತೆ ಪ್ರದರ್ಶನ ನೀಡಿದ್ದ ಧಾರವಾಡ ತಂಡವು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದು ಜಿಲ್ಲೆಯ ಹೆಮ್ಮೆ ಹೆಚ್ಚಿಸಿದೆ.
ವಿವಿಧ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಜಯ ಗಳಿಸಿ, ಜಿಲ್ಲೆಯ ಕೀರ್ತಿ ಹೆಚ್ಚಿಸಿರುವ ಎಲ್ಲ ವಿಜೇತ ನೌಕರರನ್ನು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿಲ್ಲಾ ಪಂಚಾಯತ ಸಿಇಓ ಸ್ವರೂಪ ಟಿ.ಕೆ., ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಸ್.ಎಸ್.ಕೆಳದಿಮಠ, ನೌಕರರ ಸಂಘದ ಜಿಲ್ಲಾಧ್ಯಕ್ಷ ಎಸ್.ಎಫ್.ಸಿದ್ದನಗೌಡರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಪ್ರಕಾಶ ಸರಶೆಟ್ಟಿ ಹಾಗೂ ಕರ್ನಾಟಕ ರಾಜ್ಯ ಸರಕಾರಿ ನೌಕರ ಸಂಘದ ಜಿಲ್ಲಾ ಪದಾಧಿಕಾರಿಗಳು, ತಾಲೂಕು ಅಧ್ಯಕ್ಷರು ಮತ್ತು ಜಿಲ್ಲೆಯ ಎಲ್ಲ ನೌಕರರು ಅಭಿನಂದಿಸಿದ್ದಾರೆ.
