ಹಾಸನ: ಹಲವು ದಿನಗಳ ಆತಂಕದ ಬಳಿಕ ಶಿರಾಡಿಘಾಟ್ ಸಂಚಾರಕ್ಕೆ ಮುಕ್ತವಾಗಿದ್ದು, ದಿನದ 24 ಗಂಟೆಯೂ ಎಲ್ಲಾ ವಾಹನಗಳ ಓಡಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ಮಲೆನಾಡಿನಲ್ಲಿ ಮಳೆ ಕಡಿಮೆಯಾದ ಹಿನ್ನೆಲೆ ವಾಹನಗಳ ಓಡಾಟಕ್ಕೆ ಜಿಲ್ಲಾಡಳಿತ ಅವಕಾಶ ಮಾಡಿದೆ. ಸಕಲೇಶಪುರ ತಾಲೂಕಿನ ದೊಡ್ಡತಪ್ಲು ಬಳಿ ಹಲವು ಭಾರಿ ಗುಡ್ಡ ಕುಸಿದಿದ್ದ ಸ್ಥಳದಲ್ಲಿ ಮಣ್ಣನ್ನು ತೆರವು ಮಾಡಿ ಆತಂಕ ನಿವಾರಣೆ ಮಾಡಲಾಗಿದೆ. ಈ ಹಿನ್ನಲೆ ವಾಹನಗಳು ಸಂಚರಿಸಲು ಅನುವು ಮಾಡಿಕೊಡಲಾಗಿದೆ.
ಮುಂಜಾಗ್ರತಾ ಕ್ರಮವಾಗಿ ಸ್ಥಳದಲ್ಲಿ ರೆಸ್ಕ್ಯೂ ಟೀಂ ನಿಯೋಜನೆ
ಇನ್ನು ಹಲವು ವಾಹನಗಳ ಮೇಲೆ ಮಣ್ಣು ಕುಸಿದಿದ್ದು, ಗುಡ್ಡ ಕುಸಿದಿದ್ದರಿಂದ ವಾಹನಗಳ ಓಡಾಟಕ್ಕೆ ನಿರ್ಬಂಧ ಹೇರಲಾಗಿತ್ತು. ಇದೀಗ ವಾಹನಗಳ ಓಡಾಟದ ಬಗ್ಗೆ ಸಕಲೇಶಪುರ ಎಸಿ ಶೃತಿ ಅವರು ಮಾಹಿತಿ ನೀಡಿದ್ದಾರೆ. ‘ಎರಡು ದಿನದಿಂದ ಮಳೆಯ ಪ್ರಮಾಣ ಸ್ವಲ್ಪ ಕಡಿಮೆಯಾಗಿದೆ. ಹೀಗಾಗಿ ವಾಹನಗಳ ಓಡಾಟಕ್ಕೆ ಅವಕಾಶ ಮಾಡಿಕೊಡಲಾಗಿದೆ. ಆದರೂ ಮುಂಜಾಗ್ರತಾ ಕ್ರಮವಾಗಿ ಸ್ಥಳದಲ್ಲಿ ರೆಸ್ಕ್ಯೂ ಟೀಂ ನಿಯೋಜನೆ ಮಾಡಿದ್ದೇವೆ. ಪೊಲೀಸ್ ಅಧಿಕಾರಿಗಳು, ಎನ್ಹೆಚ್ ಟೀಂ ದಿನದ 24 ಗಂಟೆಯೂ ಸ್ಥಳದಲ್ಲಿರಲಿದೆ. ಯಾವುದೇ ಅವಘಡ ಸಂಭವಿಸದಂತೆ ಎಚ್ಚರ ವಹಿಸಿ ಸಂಚಾರಕ್ಕೆ ಅವಕಾಶ ನೀಡಲಾಗಿದೆ ಎಂದರು.