ಬೆಂಗಳೂರು: ರಾಜಧಾನಿಯ ಬಿಬಿಎಂಪಿಯ ಬಹುತೇಕ ಆರ್ಓ ಮತ್ತು ಎಆರ್ಓ ಕಚೇರಿಗಳಲ್ಲಿ ಕಾರ್ಯನಿರ್ವಹಣೆಯಲ್ಲಿ ಲೋಪಗಳು ಕಂಡುಬಂದ ಬಗ್ಗೆ ವ್ಯಾಪಕ ದೂರುಗಳು ಬಂದ ಹಿನ್ನೆಲೆಯಲ್ಲಿ ಬಿಬಿಎಂಪಿಯ 54 ಕಚೇರಿಗಳ ಮೇಲೆ ಶುಕ್ರವಾರ ಲೋಕಾಯುಕ್ತ ಪೊಲೀಸರು ಏಕಕಾಲಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಖುದ್ದು ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಹಾಗೂ ಇಬ್ಬರು ಉಪ ಲೋಕಾಯುಕ್ತರು ದಾಳಿಯಲ್ಲಿ ಭಾಗಿಯಾಗಿ, ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ತರಾಟೆ ತೆಗೆದುಕೊಂಡರು. ಶುಕ್ರವಾರ ಮಧ್ಯಾಹ್ನದಿಂದ ನಡೆಯುತ್ತಿದ್ದ ತಪಾಸಣೆಯು ಹಲವು ಕಚೇರಿಗಳಲ್ಲಿ ತಡರಾತ್ರಿವರೆಗೂ ಜರುಗಿತು.
ಲೋಕಾಯುಕ್ತ ನ್ಯಾ.ಬಿ.ಎಸ್.ಪಾಟೀಲ್ ಅವರು ಹೆಬ್ಬಾಳ ಸಬ್ ಡಿವಿಷನ್ ಮುನಿರೆಡ್ಡಿ ಪಾಳ್ಯ ಮುಖ್ಯ ರಸ್ತೆಯಲ್ಲಿರುವ ಕಾರ್ಯಪಾಲಕ ಅಭಿಯಂತರರು, ಸಹಾಯಕ ಕಾರ್ಯಪಾಲಕ ಅಭಿಯಂತರರು ಹಾಗೂ ಎಆರ್ಓ ಕಚೇರಿಗೆ ಖುದ್ದು ಭೇಟಿ ನೀಡಿದ್ದರು. ಕಚೇರಿಯಲ್ಲಿ ಯಾವುದೇ ವಹಿಗಳನ್ನು ಅಂದರೆ ಹಾಜರಾತಿ ವಹಿ, ನಗದು ಘೋಷಣಾ ವಹಿ, ಚಲನಾ-ವಲನಾ ವಹಿಗಳನ್ನು ಸರಿಯಾಗಿ ನಿರ್ವಹಣೆ ಮಾಡದಿರುವುದು ಪತ್ತೆಯಾಗಿದೆ.
ಸಹಾಯಕ ಕಾರ್ಯಪಾಲಕ ಅಭಿಯಂತರರ ಹೆಬ್ಬಾಳ ಸಬ್ ಡಿವಿಷನ್ ಕಚೇರಿಯಲ್ಲಿ ಒಟ್ಟು 22 ಸಿಬ್ಬಂದಿಯಿದ್ದು, ಅದರಲ್ಲಿ 21 ಮಂದಿ ಮಾತ್ರ ಹಾಜರಾತಿ ವಹಿಗೆ ಸಹಿ ಮಾಡಿದ್ದು, ಕಚೇರಿಯಲ್ಲಿ ಕೇವಲ ಮೂರು ಜನ ಮಾತ್ರ ಇದ್ದರು. ಎಆರ್ಓ ಸಹ ಕಚೇರಿಯಲ್ಲಿ ಹಾಜರಿರಲಿಲ್ಲ. ಕರೆ ಮಾಡಿ ಕೇಳಿದಾಗ ಬೆಳಗ್ಗೆ ಕಚೇರಿಗೆ ಬಂದು ನಂತರ ಮುಖ್ಯ ಕಚೇರಿಗೆ ಹೋಗಿರುವುದಾಗಿ ತಿಳಿಸಿದ್ದಾರೆ.
ಆದರೆ ಆ ಬಗ್ಗೆ ಚಲನ – ವಲನ ವಹಿಯಲ್ಲಿ ನಮೂದು ಮಾಡಿಲ್ಲ. ಎಆರ್ಓ ಅವರು ಬೆಳಗ್ಗೆ ಕಚೇರಿಗೆ ಬಂದು ಮಧ್ಯಾಹ್ನ ತನಕ ಕೆಲಸ ಮಾಡಿರುವುದಾಗಿ ಹೇಳಿದ್ದಾರೆ. ಆದರೆ ಹಾಜರಾತಿ ವಹಿಯಲ್ಲಿ ಅವರು ಸಹಿ ಮಾಡಿಲ್ಲ. ಇದೇ ಕಚೇರಿಯಲ್ಲಿ ನಗದು ವಹಿ ಮತ್ತು ಚಲನಾ-ವಲನಾ ವಹಿಗಳನ್ನು ಆಗಸ್ಟ್- 2023ರ ನಂತರ ನಿರ್ವಹಣೆ ಮಾಡಿಲ್ಲ. ಈ ಬಗ್ಗೆ ಹಾಜರಿದ್ದ ಸಿಬ್ಬಂದಿಯು ಯಾವುದೇ ಸಮರ್ಪಕ ಉತ್ತರ ನೀಡದಿರುವುದು ತಪಾಸಣೆಯಲ್ಲಿ ಕಂಡುಬಂದಿದೆ ಎಂದು ಲೋಕಾಯುಕ್ತ ಮೂಲಗಳು ತಿಳಿಸಿವೆ.
ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಉಪ ಲೋಕಾಯುಕ್ತರಾದ ನ್ಯಾ.ವೀರಪ್ಪ, ”ಬಿಬಿಎಂಪಿ ಬಗ್ಗೆ ಹಲವು ದೂರುಗಳು ಬಂದಿದ್ದವು. ಬೆಂಗಳೂರಿನಾದ್ಯಂತ 50ಕ್ಕಿಂತ ಹೆಚ್ಚು ಬಿಬಿಎಂಪಿ ಕಚೇರಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇವೆ. ಬಹುತೇಕ ಕಚೇರಿಗಳಲ್ಲಿ ಅಧಿಕಾರಿಗಳು ಇರಲಿಲ್ಲ. ಎಲ್ಲಿ ಹೋದರೂ ಎಂದು ಕೇಳಿದರೆ, ವೈಕುಂಠ ಏಕಾದಶಿ ಪೂಜೆಗೆ ಹೋಗಿರುವ ಬಗ್ಗೆ ಉತ್ತರ ಬಂದಿದೆ. ರಿಜಿಸ್ಟರ್ ಬುಕ್ನಲ್ಲಿ ಎಂಟ್ರಿ ಇಲ್ಲ, ಯಾರು ಯಾವಾಗ ಬೇಕಾದರೂ ಬರಬಹುದು, ಯಾವಾಗ ಬೇಕಾದರೂ ಹೋಗಬಹುದು. ಏನು ಕೇಳಿದರೂ, ಫುಲ್ ಸೈಲೆಂಟ್ ಆಗಿ ನಿಂತುಕೊಳ್ಳುತ್ತಾರೆ” ಎಂದರು.
ಸೌತ್ ಎಂಡ್ ಸರ್ಕಲ್ ಬಿಬಿಎಂಪಿ ಕಚೇರಿಗೆ ತೆರಳಿದಾಗ, ಕೇಸ್ ವರ್ಕರ್ ಕವಿತಾ ಬದಲು ಅವರ ಮಗ ನವೀನ್ ಹಾಜರಾಗಿರುವುದು ಕಂಡು ಬಂದಿತ್ತು. ಮಗನ ಜೊತೆ ಸಹಾಯಕ್ಕೆ ನಿಯಮ ಉಲ್ಲಂಘಿಸಿ ಗೀತಾ ಎಂಬ ಸಹಾಯಕಿಯನ್ನು ಕವಿತಾ ನೇಮಿಸಿರುವುದು ಬೆಳಕಿಗೆ ಬಂದಿದೆ. ಕಚೇರಿಗೆ ದಾಳಿ ನಡೆಸಿದ ವೇಳೆ ನವೀನ್ ಅವರನ್ನು ಪ್ರಶ್ನಿಸಿದಾಗ ಆತ ತಾಯಿ ಮನೆಯಲ್ಲಿ ಅಡುಗೆ ಮಾಡುತ್ತಿದ್ದಾರೆ ಎಂದು ಹೇಳಿದ್ದಾನೆ. ನೇರವಾಗಿ ಕವಿತಾಗೆ ಕರೆ ಮಾಡಿಸಿ ವಿಚಾರಿಸಿದ್ದೇನೆ. ತನ್ನ ತಾಯಿಗೆ ಕಂಪ್ಯೂಟರ್ ಬಗ್ಗೆ ಗೊತ್ತಿಲ್ಲ, ನನಗೆಲ್ಲವೂ ಗೊತ್ತು ನಾನೇ ಎಲ್ಲವನ್ನೂ ನಿರ್ವಹಣೆ ಮಾಡುತ್ತೇನೆ ಎಂದು ಮಗ ಹೇಳುತ್ತಾನೆ. ಆತ ಯಾರ ಅನುಮತಿಯನ್ನೂ ಪಡೆದಿಲ್ಲ. ಆತನೇ ಪ್ರಮುಖ ಅಧಿಕಾರಿ ಎಂಬಂತೆ ಧಿಮಾಕಿನಿಂದ ವರ್ತಿಸುತ್ತಿದ್ದಾನೆ. ನಮಗೆ ಇದೆಲ್ಲದರಿಂದ ಭಾರಿ ಶಾಕ್ ಆಗಿದೆ ಎಂದು ತಿಳಿಸಿದರು.
ಬಿಬಿಎಂಪಿ ಕಚೇರಿಯಲ್ಲಿ ಲೋಕಾಯುಕ್ತ ಅಧಿಕಾರಿಗಳಿಂದ ಪರಿಶೀಲನೆ
”ಎಆರ್ಓ ಸುಜಾತ ಎಂಬವರು ಮಧ್ಯಾಹ್ಬ ಮೂರುವರೆಗೆ ಆಫೀಸ್ಗೆ ಬಂದಿದ್ದಾರೆ. ಬಿಬಿಎಂಪಿ ಕಚೇರಿಗಳಿಗೆ ಅಪ್ಪ, ಅಮ್ಮ ಯಾರು ಇಲ್ಲವೇ? ಕಚೇರಿಯನ್ನು ಅಧಿಕಾರಿಗಳು ಸ್ವಂತ ಆಸ್ತಿ ಮಾಡಿಕೊಂಡಿದ್ದಾರೆ. ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಅವರನ್ನು ಕರೆಯಿಸುತ್ತೇವೆ. ಸಾಕಷ್ಟು ಜನ ಅಧಿಕಾರಿಗಳು ವೈಕುಂಠ ಏಕಾದಶಿ ಪೂಜೆಗೆ ಹೋಗಿದ್ದಾರೆ. ಎಲ್ಲದರ ಬಗ್ಗೆ ಸರ್ಕಾರದ ಗಮನ ತಂದು ಸೊಮೊಟೊ ಕೇಸ್ ದಾಖಲಿಸುತ್ತೇವೆ” ಎಂದು ನ್ಯಾ.ವೀರಪ್ಪ ಮಾಹಿತಿ ನೀಡಿದರು.