Sunday, April 20, 2025
Google search engine

Homeರಾಜ್ಯಸುದ್ದಿಜಾಲಪ್ರಗತಿಯಲ್ಲಿರುವ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸಿ: ರಶ್ಮಿ ಮಹೇಶ್

ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸಿ: ರಶ್ಮಿ ಮಹೇಶ್

ರಾಮನಗರ: ಬಾಡಿಗೆ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲೆಯ ಕೆಲವೊಂದು ಸರ್ಕಾರಿ ಕಚೇರಿಗಳು ಹಾಗೂ ವಸತಿ ನಿಲಯಗಳು ಸರ್ಕಾರದ ಕಟ್ಟಡಗಳಿಗೆ ಸ್ಥಳಾಂತರವಾಗಲು ಕೂಡಲೇ ಕಾರ್ಯಪ್ರವೃತ್ತ ರಾಗಬೇಕು ಎಂದು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು (ವಿಪತ್ತು ನಿರ್ವಹಣೆ) ಹಾಗೂ ರಾಮನಗರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ರಶ್ಮಿ ಮಹೇಶ್ ಅವರು ಸಂಬಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. 

ಅವರು ಡಿ. 29ರ ಸೋಮವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸರ್ಕಾರದ ಯಾವುದೇ ಇಲಾಖೆಯ ಜಿಲ್ಲಾ, ತಾಲೂಕು ಮಟ್ಟದ ಕಚೇರಿಗಳು ಇನ್ನೂ ಕೂಡ ಬಾಡಿಗೆ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದಲ್ಲೀ, ಕೂಡಲೇ ಅವುಗಳು ಸರ್ಕಾರಿ ಕಟ್ಟಡಕ್ಕೆ ಸ್ಥಳಾಂತರವಾಗಬೇಕು, ಚನ್ನಪಟ್ಟಣ ಬಳಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಸತಿ ಶಾಲೆ 5 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಾಣಗೊಂಡಿದೆ, ಕೂಡಲೇ ಇದನ್ನು ಲೋಕೋಪಯೋಗಿ ಇಲಾಖೆಯಿಂದ ಸಂಬಧಿಸಿದ ಇಲಾಖೆ ವಶಕ್ಕೆ ಪಡೆದು ಅಲ್ಲಿಯೇ ಕಾರ್ಯರಂಭ ಮಾಡಲು ಅಧಿಕಾರಿಗಳು ಕ್ರಮವಹಿಸುವಂತೆ ತಿಳಿಸಿದರು. 

ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ಜನತಾ ದರ್ಶನ ಕಾರ್ಯಕ್ರಮಗಳಲ್ಲಿ ಸ್ವೀಕೃತಿಯಾಗಿರುವ ಅಹವಾಲುಗಳನ್ನು ಕಾನೂನಿನ ಚೌಕಟ್ಟಿನಲ್ಲಿ ಶೀಘ್ರವಾಗಿ ಬಗೆಹರಿಸುವಂತೆ ಅವರು ಸಂಬಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.  

ಕನಕಪುರ ತಾಲ್ಲೂಕಿನ ಗರಳಾಪುರ ಮತ್ತು ಇತರೆ 12 ಕೆರೆಗಳಿಗೆ ಅರ್ಕಾವತಿ ಜಲಾಶಯದ ಹಿನ್ನೀರಿನಿಂದ ನೀರನ್ನು ಎರಡು ಹಂತಗಳಲ್ಲಿ ಏತ ನೀರಾವರಿ ಮೂಲಕ ಎತ್ತಿ ತುಂಬಿಸಲು ಉದ್ದೇಶಿಸಲಾಗಿದೆ. ಕಾವೇರಿ ನದಿ ಸತ್ತೆಗಾಲ ಸಮೀಪದ ಆಣೆಕಟ್ಟೆಯಿಂದ ಗುರುತ್ವಾಕರ್ಷಣೆ ಮೂಲಕ ಇಗ್ಗಲೂರಿನ ಎಚ್.ಡಿ. ದೇವೇಗೌಡ ಬ್ಯಾರೇಜಿಗೆ ನೀರನ್ನು ಹರಿಸಿ, ಹಾಲಿ ಇರುವ ಕೆರೆ ತುಂಬಿಸುವ ಯೋಜನೆಗಳಿಗೆ ನೀರಿನ ಲಭ್ಯತೆಯನ್ನು ಹೆಚ್ಚಿಸುವುದು ಹಾಗೂ ಅಲ್ಲಿಂದ ನೀರನ್ನು ಎತ್ತಿ ಮಂಚನಬೆಲೆ ಮತ್ತು ವೈ.ಜಿ ಗುಡ್ಡ ಜಲಾಶಗಳಿಗೆ ಕುಡಿಯುವ ನೀರನ್ನು ಒದಗಿಸಲಾಗುವುದು ಎಂದರು. ಕನಕಪುರ ತಾಲ್ಲೂಕಿನ ಉಯ್ಯಂಬಳ್ಳಿ ಹಾಗೂ ದೊಡ್ಡಾಲಹಳ್ಳಿ ಹೋಬಳಿಯ ಸುಮಾರು 8 ಗ್ರಾಮಗಳ ಜಮೀನುಗಳಿಗೆ ಸೂಕ್ಷ ಹನಿ ನೀರಾವರಿ ಮುಖಾಂತರ ನೀರನ್ನು ಒದಗಿಸಲು ಯೋಜಿಸಲಾಗಿರುತ್ತದೆ ಎಂದು ತಿಳಿಸಿದರು.

ಸ್ನಾತಕೋತ್ತರ ಪದವಿ ಕಾಲೇಜು: ರಾಮನಗರ ಜಿಲ್ಲೆಯ ವಿದ್ಯಾರ್ಥಿಗಳು ಸ್ನಾತಕೋತ್ತರ ಪದವಿ ಪಡೆಯಲು ಬೆಂಗಳೂರು ಹಾಗೂ ಸುತ್ತಮುತ್ತಲ ಜಿಲ್ಲೆಗಳಿಗೆ ಹೋಗುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಸ್ನಾತಕೋತ್ತರ ಕೇಂದ್ರ ತೆರೆಯಲು 10 ಎಕರೆ ನಿವೇಶನ ಮಂಜೂರು ಮಾಡಲಾಗಿದೆ ಹಾಗೂ 14.6 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ತ್ವರಿತವಾಗಿ ಕಾಮಗಾರಿಯನ್ನು ಪೂರ್ಣಗೊಳಿಸಿ, ಜಿಲ್ಲೆಯ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡುವಂತೆ ಹಾಗೂ ಅಗತ್ಯವಿರುವ ಐಚ್ಚಿಕ ವಿಷಯಗಳನ್ನು ಪದವಿ ಕಾಲೇಜುಗಳ ಪ್ರಾಂಶುಪಾಲರು ಸಂಬಧಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಸಿ ತರಗತಿಗಳನ್ನು ಪ್ರಾರಂಭಿಸಲು ಕ್ರಮವಹಿಸುವಂತೆ ತಿಳಿಸಿದರು.

ಸರ್ಕಾರದ 5 ಗ್ಯಾರಂಟಿ ಯೋಜನೆಗಳ ಪ್ರಯೋಜನವನ್ನು ಜಿಲ್ಲೆಯ ಪ್ರತಿಯೊಬ್ಬ ನಾಗರೀಕರಿಗೂ ತಲುಪಬೇಕು, ಆ ದಿಸೆಯಲ್ಲಿ ಅಧಿಕಾರಿಗಳು ಶ್ರಮಿಸಬೇಕು, ಈ ಸಂದರ್ಭದಲ್ಲಿ ಸಮಸ್ಯೆಗಳು ಎದುರಾದಲ್ಲೀ ಅದನ್ನು ಬಗೆಹರಿಸಬೇಕು ಎಂದು ಹೇಳಿದರು. ರಾಮನಗರ ಜಿಲ್ಲೆಯಲ್ಲಿ ಒಟ್ಟು 23 ಜಿಲ್ಲಾ ಮಟ್ಟದ ಕಚೇರಿಗಳಲ್ಲಿ ಮತ್ತು ಒಟ್ಟು 14 ತಾಲ್ಲೂಕು ಮಟ್ಟದ ಕಚೇರಿಗಳಲ್ಲಿ ಇ-ಆಫೀಸ್ ತಂತ್ರಾಂಶವನ್ನು ಅನುಷ್ಠಾನಗೊಳಿಸಲಾಗಿದೆ ಎಂದ ಅವರು, ಮುಂದಿನ ಶೈಕ್ಷಣಿಕ ವರ್ಷದಲ್ಲಿ ಶಾಲೆ ಹಾಗೂ ಕಾಲೇಜುಗಳಲ್ಲಿ ಉತ್ತಮ ಫಲಿತಾಂಶ ಲಭಿಸಲು ಶಿಕ್ಷಣ ಇಲಾಖೆಯ ಅಧಿಕಾರಿಗಳು, ಶಿಕ್ಷಕರು, ಉಪನ್ಯಾಸಕರು ಹೆಚ್ಚಿನ ಕಾಳಜಿ ವಹಿಸಬೇಕು ಎಂದರು.

2023ರ ಡಿಸೆಂಬರ್‌ನಲ್ಲಿ ಜಿಲ್ಲೆಯಲ್ಲಿರುವ ಒಟ್ಟು 2,65,115 ಪಡಿತರ ಚೀಟಿದಾರರ 8,78,838 ಫಲಾನುಭವಿಗಳಿಗೆ 14,49,81,100 ರೂ.ಗಳ ಹಣವನ್ನು ಯಶಸ್ವಿಯಾಗಿ ಪಾವತಿಸಲಾಗಿದೆ. 2023ರ ಜುಲೈ ಅಂತ್ಯಕ್ಕೆ ಸಮರ್ಪಕವಾದ ಬ್ಯಾಂಕ್ ಮಾಹಿತಿ ಇಲ್ಲದ 39,991 ಫಲಾನುಭವಿಗಳ ಪೈಕಿ 27,470 ಫಲಾನುಭವಿಗಳ ಬ್ಯಾಂಕ್ ಖಾತೆ ವಿವರಗಳನ್ನು ಸರಿಪಡಿಸಲಾಗಿದೆ. ಬಾಕಿ ಉಳಿದ ಫಲಾನುಭವಿಗಳ ಸಮಸ್ಯೆಗಳನ್ನು ಬಗೆಹರಿಸಲು ಸಂಬಂಧಿಸಿದ ಅಧಿಕಾರಿಗಳು ಕೂಡಲೇ ಕ್ರಮವಹಿಸಿ, ಅವರ ಖಾತೆಗಳಿಗೆ ಹಣ ಪಾವತಿಸುವಂತೆ ನಿರ್ದೇಶನ ನೀಡಿದರು.

ರೆವಿನ್ಯೂ ನಕ್ಷೆಯಲ್ಲಿ ರಸ್ತೆ ಇದ್ದರೂ ಕೆಲ ಹಳ್ಳಿಗಳಲ್ಲಿ ರಸ್ತೆ ಸಮಸ್ಯೆಗಳ ಬಗ್ಗೆ ಜನತಾ ದರ್ಶನದಲ್ಲಿ ಮನವಿ ಪತ್ರಗಳನ್ನು ಸಲ್ಲಿಸುತ್ತಿದ್ದಾರೆ. ಇನ್ನು ಮುಂದೆ ಈ ರೀತಿ ಮನವಿ ಪತ್ರ ಸ್ವೀಕರಿಸಿದಲ್ಲಿ ಸಂಬಧ ಪಟ್ಟ ತಹಶೀಲ್ದಾರ್ ಗಳನ್ನು ನೇರ ಹೊಣೆಗಾರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು. 

ವೆಬ್‌ಸೈಟ್‌ನಲ್ಲಿ ಕಡ್ಡಾಯ ಹಾಜರಾತಿ ಪ್ರಕಟ: ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕಡ್ಡಾಯವಾಗಿ 10 ಗಂಟೆಗೆ ಕಚೇರಿಗೆ ಹಾಜರಾಗಬೇಕು, ನಿಗದಿತ ಸಮಯದೊಳಗೆ ಹಾಜರಾದ ಬಗ್ಗೆ ಬಯೋಮೆಟ್ರಿಕ್ ಹಾಜರಾತಿಯನ್ನು ಜಿಲ್ಲಾಧಿಕಾರಿಗಳ ಅಥವಾ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ  ವೆಬ್‌ಸೈಟಿನಲ್ಲಿ ಕಡ್ಡಾಯವಾಗಿ ಅಪ್‌ಲೋಡ್ ಮಾಡುವಂತೆ ಸೂಚಿಸಿದರು.

ಸಭೆಗೆ ಗೈರು ಅಧಿಕಾರಿಗಳಿಗೆ ನೋಟಿಸ್: ಸಭೆಗೆ ಗೈರುಹಾಜರಾಗಿದ್ದ ಕೆಆರ್‌ಡಿಎಲ್, ನಿರ್ಮಿತಿ ಕೇಂದ್ರದ  ಅಧಿಕಾರಿಗಳಿಗೆ ನೋಟೀಸ್ ನೀಡುವಂತೆ ಸಂಬಧಿಸಿದವರಿಗೆ ಅವರು ತಿಳಿಸಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಿಗ್ವಿಜಯ್ ಬೋಡ್ಕೆ, ಅಪರ ಜಿಲ್ಲಾಧಿಕಾರಿ ಶಿವಾನಂದ ಮೂರ್ತಿ, ಉಪ ವಿಭಾಗಾಧಿಕಾರಿ ಬಿನೋಯ್ ಹಾಗೂ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಚಿಕ್ಕಸುಬ್ಬಯ್ಯ ವೇದಿಕೆಯಲ್ಲಿದ್ದರು. ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು. 

RELATED ARTICLES
- Advertisment -
Google search engine

Most Popular