ಚಾಮರಾಜನಗರ: ವಿದ್ಯಾರ್ಥಿಗಳು ಶಿಕ್ಷಣ ಪಡೆಯುವುದರ ಜೊತೆಗೆ ಸ್ಪರ್ಧಾತ್ಮಕ ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕು ಎಂದು ಚಾಮರಾಜನಗರ ವಿಶ್ವವಿದ್ಯಾಲಯದ ಕುಲಪತಿ ಡಾ. ಎಂ.ಆರ್. ಗಂಗಾಧರ್ ಅವರು ಸಲಹೆ ಮಾಡಿದರು.
ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ವರನಟ ಡಾ. ರಾಜ್ಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ನಡೆದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಸಾಂಸ್ಕøತಿಕ ಕ್ರೀಡಾ ರಾಷ್ಟ್ರೀಯ ಸೇವಾ ಯೋಜನೆ, ಸ್ಕೌಟ್ ಮತ್ತು ಗೈಡ್ ಹಾಗೂ ರೆಡ್ ಕ್ರಾಸ್ ಚಟುವಟಿಕೆಗಳ ಸಮಾರೋಪ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ದೇಶವು ಸ್ವಾತಂತ್ರ ಪಡೆದ ನಂತರ ಶಿಕ್ಷಣ ಕ್ಷೇತ್ರದಲ್ಲಿ ಗಣನೀಯ ಬದಲಾವಣೆಗಳನ್ನು ಕಂಡಿದೆ. ಮಹಿಳೆಯರ ಶಿಕ್ಷಣದಿಂದ ದೇಶವು ಸಾಮಾಜಿಕವಾಗಿ, ಆರ್ಥಿಕವಾಗಿ, ರಾಜಕೀಯವಾಗಿ ಮುಂದೆ ಬರಲು ಸಾಧ್ಯ. ಜಿಲ್ಲೆಯಲ್ಲಿ ವಿದ್ಯಾರ್ಥಿನಿಯರು ವ್ಯಾಸಂಗದ ಕಡೆ ಹೆಚ್ಚಾಗಿ ಆಸಕ್ತಿ ತೋರುತ್ತಿರುವುದು ವಿಶೇಷವಾಗಿದೆ. ಜಿಲ್ಲೆಯ ವಿದ್ಯಾರ್ಥಿನಿಯರು ಉತ್ತಮ ಶಿಕ್ಷಣ ಪಡೆದು ಉನ್ನತ ಸ್ಥಾನಗಳಿಗೆ ಏರುವಂತಾಗಬೇಕು ಎಂದರು.ಜಿಲ್ಲೆಯು ಕಲೆ, ಸಂಸ್ಕøತಿಯಲ್ಲಿ ತನ್ನದೇ ಆದ ವಿಶಿಷ್ಟ ಸ್ಥಾನ ಪಡೆದುಕೊಂಡಿದೆ. ವಿದ್ಯಾರ್ಥಿಗಳು ಕೌಶಲ್ಯ ಚಟುವಟಿಕೆಗಳ ಕಡೆಗೂ ಗಮನಹರಿಸಬೇಕು. ಉತ್ತಮ ಚಟುವಟಿಕೆಗಳು ದೈಹಿಕವಾಗಿ ಮಾನಸಿಕವಾಗಿ ಸದೃಢವಾಗಿಸಲು ಸಹಕಾರಿಯಾಗುತ್ತದೆ. ಸರ್ಕಾರದ ಶೈಕ್ಷಣಿಕ ಸೌಲಭ್ಯಗಳನ್ನು ಪಡೆದುಕೊಂಡು ಮುಂದೆ ಬರಬೇಕು. ಸಮಾಜದಲ್ಲಿ ಕಂಡುಬರುವ ಮೌಢ್ಯಗಳನ್ನು ತೊಡೆದು ಹಾಕುವ ನಿಟ್ಟಿನಲ್ಲಿ ಚಿಂತಿಸಬೇಕು ಎಂದು ಚಾಮರಾಜನಗರ ವಿಶ್ವವಿದ್ಯಾಲಯದ ಕುಲಪತಿ ಡಾ. ಎಂ.ಆರ್. ಗಂಗಾಧರ್ ಅವರು ತಿಳಿಸಿದರು.
ಐಕ್ಯೂಎಸಿ ಸಂಚಾಲಕ ಪಿ. ಬಾಲಸುಬ್ರಹ್ಮಣ್ಯ ಅವರು ಮಾತನಾಡಿ ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಕ್ರೀಡೆ, ಸಾಂಸ್ಕøತಿಕ ಚಟುವಟಿಕೆಗಳಲ್ಲೂ ಭಾಗವಹಿಸಬೇಕು. ವಿದ್ಯಾರ್ಥಿಗಳು ದೇಶದ ಆಶಾಕಿರಣಗಳಾಗಿದ್ದು, ಉತ್ತಮ ಸಂಸ್ಕಾರವಂತರಾಗಿ ಬೆಳೆಯಬೇಕು. ತಮ್ಮಲ್ಲಿರುವ ಕಲೆ, ಸಾಹಿತ್ಯ ಹಾಗೂ ಪ್ರತಿಭೆಗಳನ್ನು ಅನಾವರಣಗೊಳಿಸಲು ಉತ್ತಮ ವೇದಿಕೆಗಳನ್ನು ಸುದುಪಯೋಗ ಮಾಡಿಕೊಳ್ಳಬೇಕು ಎಂದರು.ಚಾಮರಾಜನಗರ ಸರ್ಕಾರಿ ಮಹಿಳಾ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಎಂ.ಆರ್. ಸುಮತಿ ಅವರು ಅಧ್ಯಕ್ಷತೆ ವಹಿಸಿದ್ದರು. ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿನಿಯರಿಗೆ ಬಹುಮಾನ ಹಾಗೂ ಪ್ರಶಂಸನಾ ಪತ್ರಗಳನ್ನು ನೀಡಲಾಯಿತು.
ಕ್ರೀಡಾ ಸಮಿತಿಯ ಎ.ಎಂ. ಪವನ್, ಸ್ಕೌಟ್ಸ್ ಮತ್ತು ಗೈಡ್ ಹಾಗೂ ರೆಡ್ ಕ್ರಾಸ್ ಸಮಿತಿಯ ಡಾ. ರುಕ್ಮಿಣಿ, ಸಿದ್ದರಾಜು, ಡಾ. ಪ್ರಭಾವತಿ ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.