ವರದಿ: ವಿನಯ್ ದೊಡ್ಡಕೊಪ್ಪಲು
ಕೆ.ಆರ್.ನಗರ: ನೌಕರರ ಸಂಘಟನೆಗಳು ಸೇರಿದಂತೆ ಇತರ ಸಂಘ ಸಂಸ್ಥೆಗಳು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡುವ ಮೂಲಕ ಮಕ್ಕಳಿಗೆ ಪ್ರೋತ್ಸಾಹ ನೀಡಬೇಕು ಎಂದು ಶಾಸಕ ಡಿ.ರವಿಶಂಕರ್ ಹೇಳಿದರು. ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ರಾಜ್ಯ ಶಾಲಾ ಶಿಕ್ಷಣ ಇಲಾಖೆ ನೌಕರರ ಸಂಘದ ವತಿಯಿಂದ ನಡೆದ ಪ್ರತಿಭಾ ಪುರಸ್ಕಾರ ಮತ್ತು ಅಭಿನಂದನಾ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು ಇಂತಹಾ ಕಾರ್ಯಕ್ರಮಗಳಿಗೆ ನಾನು ಎಲ್ಲಾ ರೀತಿಯ ಸಹಕಾರ ನೀಡುತ್ತೇನೆ ಎಂದರು.
ವಿದ್ಯಾರ್ಥಿಗಳಿಗೆ ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪ್ರಮುಖ ಘಟ್ಟವಾಗಿದ್ದು ಇದನ್ನು ಅರಿತು ಓದಿನ ಕಡೆಗೆ ಹೆಚ್ಚು ಒತ್ತು ನೀಡಬೇಕೆಂದರಲ್ಲದೆ ಮೊಬೈಲ್ ಬಳಕೆಯಿಂದ ದೂರ ಇರಬೇಕು ಎಂದು ಸಲಹೆ ನೀಡಿದ ಶಾಸಕರು ಈ ಬಾರಿಯ ಎಸ್ಎಸ್ಎಲ್ಸಿ ಫಲಿತಾಂಶ ಬೇಸರ ತಂದಿದ್ದು ಮುಂದಿನ ವರ್ಷ ಉತ್ತಮ ಸಾಧನೆ ಮಾಡಲು ಶಿಕ್ಷಣ ಇಲಾಖೆ ಸಹಕಾರ ನೀಡಬೇಕು ಎಂದು ಹೇಳಿದರು.
ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಪ್ರಗತಿ ಸಾಧಿಸಿದಾಗ ಮಾತ್ರ ಮುಂದುವರೆದ ರಾಷ್ಟçವಾಗಲು ಸಾಧ್ಯ ಅದಕ್ಕಾಗಿ ನಾನು ಈ ಎರಡು ಕ್ಷೇತ್ರಕ್ಕೆ ಹೆಚ್ಚು ಒತ್ತು ಕೊಟ್ಟು ಕೆಲಸ ಮಾಡುತ್ತಿದ್ದು ಶಿಕ್ಷಣ ಇಲಾಖೆಯ ಎಲ್ಲಾ ಸಿಬ್ಬಂದಿಗಳು ಮತ್ತು ಭೋದಕ ವೃಂದ ಉತ್ತಮವಾಗಿ ಕೆಲಸ ಮಾಡುವ ಮೂಲಕ ಶಿಕ್ಷಿತ ಸಮಾಜ ನಿರ್ಮಾಣಕ್ಕೆ ಕಾರಣ ಕರ್ತರಾಗಬೇಕೆಂದು ಕೋರಿದರು.
ಪುರಸಭೆ ಸದಸ್ಯ ನಟರಾಜು, ಸಂಘದ ಅಧ್ಯಕ್ಷ ಎಸ್.ವಸಂತಕುಮಾರ್, ಬಿಇಒ ಆರ್.ಕೃಷ್ಣಪ್ಪ, ಕಾಂಗ್ರೆಸ್ ಮುಖಂಡ ಜಿ.ಎಸ್.ವೆಂಕಟೇಶ್ ಮಾತನಾಡಿದರು. ಎಸ್ಎಸ್ಎಲ್ಸಿ ಮತ್ತು ಪಿಯುಸಿಯಲ್ಲಿ ೯೫ಕ್ಕಿಂತ ಹೆಚ್ಚು ಅಂಕ ಪಡೆದ ೪೬ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತ್ತಲ್ಲದೆ ಸಂಘದ ಹಿರಿಯ ಸದಸ್ಯರನ್ನು ಸನ್ಮಾನಿಸಲಾಯಿತು.

ಸಂಘದ ಪದಾಧಿಕಾರಿಗಳಾದ ಗೋವಿಂದರಾಜು, ಜ್ಯೋತಿಕುಮಾರ್, ರಾಜೇಶ್ವರಿ, ಬೋಜೇಗೌಡ, ಸತೀಶ್, ಸುಮಿತ್ರ, ಚೆಲುವರಾಜು, ಲೋಕೇಶ್, ಮುತ್ತಕ್ಕ ಕಿರಗಿ ಮಠ, ಓ.ಎನ್.ಚಾರಿತ್ರ, ರೇವಣ್ಣ, ಪಿ.ಶೋಭಾ, ನಾಗರಾಜು, ಮಂಜುನಾಥ್, ಭಾಸ್ಕರ್ ಮತ್ತಿತರರು ಹಾಜರಿದ್ದರು.