ನವದೆಹಲಿ: ಮದ್ಯನೀತಿ ಹಗರಣದಲ್ಲಿ ಜೈಲುಪಾಲಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗೆ ಸುಪ್ರೀಂಕೋರ್ಟ್ ಜಾಮೀನು ಮಂಜೂರು ಮಾಡಿದೆ.
156 ದಿನಗಳ ನಂತರ ಸಿಎಂ ಕೇಜ್ರಿವಾಲ್ಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿದೆ. ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಅವರ ಪೀಠ ಈ ತೀರ್ಪು ನೀಡಿದೆ.
ರೂ. 10 ಲಕ್ಷ ಜಾಮೀನು ಬಾಂಡ್ ಮತ್ತು ಇಬ್ಬರು ಶೂರಿಟಿಗಳ ಆಧಾರದಲ್ಲಿ ಅರವಿಂದ್ ಕೇಜ್ರಿವಾಲ್ ಗೆ ಜಾಮೀನು ಮಂಜೂರು ಮಾಡಲಾಗಿದೆ.
ದೆಹಲಿ ಮದ್ಯ ನೀತಿ ಹಗರಣ ಪ್ರಕರಣದಲ್ಲಿ ಬಂಧಿತರಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಜಾಮೀನು ಅರ್ಜಿಯ ಕುರಿತು ಸುಪ್ರೀಂ ಕೋರ್ಟ್ ಈಗಾಗಲೇ ತನ್ನ ನಿರ್ಧಾರವನ್ನು ಕಾಯ್ದಿರಿಸಿತ್ತು, ನಂತರ ಚರ್ಚೆಯ ವೇಳೆ ಸಿಬಿಐ ಮತ್ತು ಕೇಜ್ರಿವಾಲ್ ತಮ್ಮ ತಮ್ಮ ವಾದ ಮಂಡಿಸಿದ್ದರು.
ಮಾರ್ಚ್ 21 ರಂದು ಕೇಜ್ರಿವಾಲ್ ಅವರನ್ನು ಇಡಿ ಬಂಧಿಸಿತ್ತು. 10 ದಿನಗಳ ವಿಚಾರಣೆಯ ನಂತರ ಅವರನ್ನು ಏಪ್ರಿಲ್ 1 ರಂದು ತಿಹಾರ್ ಜೈಲಿಗೆ ಕಳುಹಿಸಲಾಯಿತು. ಮೇ 10 ರಂದು, ಅವರನ್ನು ಸಾರ್ವತ್ರಿಕ ಚುನಾವಣೆಯಲ್ಲಿ ಪ್ರಚಾರಕ್ಕಾಗಿ 21 ದಿನಗಳ ಕಾಲ ಬಿಡುಗಡೆ ಮಾಡಲಾಗಿತ್ತು.
ಜೈಲಿನಲ್ಲಿ ಕಳೆದ ಒಟ್ಟು ಸಮಯ 177 ದಿನಗಳು, ಅದರಲ್ಲಿ 21 ದಿನಗಳನ್ನು ಕಳೆದರೆ ಕೇಜ್ರಿವಾಲ್ ಒಟ್ಟು 156 ದಿನಗಳ ಕಾಲ ಜೈಲಿನಲ್ಲಿದ್ದರು.