ರಾಮನಗರ: ಜಿಲ್ಲೆಯಲ್ಲಿ ಕ್ಷಯರೋಗ ನಿರ್ಮೂಲನೆ ಮಾಡಲು ಪ್ರತಿ ಮಂಗಳವಾರ ಹಾಗೂ ಗುರುವಾರ ಜಿಲ್ಲೆಯಾದ್ಯಂತ ಎಲ್ಲಾ ತಾಲ್ಲೂಕಿನಲ್ಲಿ ಸಂಚಾರಿ ಕ್ಷ-ಕಿರಣ ಯಂತ್ರ ಲಭ್ಯವಿದ್ದು ಸಾರ್ವಜನಿಕರು ಇದರ ಸದ್ಬಳಕೆ ಮಾಡಿಕೊಳ್ಳಬೇಕೆಂದು ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ. ಕುಮಾರ್ ಅವರು ತಿಳಿಸಿದರು.
ಅವರು ಇಂದು ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿಗಳ ಕಚೇರಿ, ಟೊಯೋಟ ಕಿರ್ಲೋಸ್ಕರ್ ಆಟೋ ಪಾರ್ಟ್ಸ್ ರವರ ಸಹಯೋಗದಲ್ಲಿ ಹಾರೋಹಳ್ಳಿ ತಾಲ್ಲೂಕಿನ ದೊಂಬರದೊಡ್ಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ಗ್ರಾಮಗಳ ವ್ಯಾಪ್ತಿಯಲ್ಲಿ ಆಸ್ಪತ್ರೆ ಸಭಾಂಗಣದಲ್ಲಿ ಕ್ಷ-ಕಿರಣ ಅಗತ್ಯವಿರುವ ರೋಗಿಗಳಿಗೆ ಸಂಚಾರಿ ಕ್ಷ-ಕಿರಣ ಯಂತ್ರದಿಂದ ಫಲಾನುಭವಿಗಳಿಗೆ ಉಚಿತ ಪರೀಕ್ಷೆ ನಡೆಸುವ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕರ್ನಾಟಕ ರಾಜ್ಯದಲ್ಲಿಯೇ ಪ್ರಥಮ ಭಾರಿಗೆ ಶೀಘ್ರ ಪತ್ತೆ ಮತ್ತು ತ್ವರಿತ ಚಿಕಿತ್ಸೆ ಅನ್ವಯ ಟಯೋಟಾ ಕಿರ್ಲೋಸ್ಕರ್ ಆಟೋ ಪಾರ್ಟ್ಸ್ ಸಂಸ್ಥೆಯವರು ಸಂಚಾರಿ ಕ್ಷ-ಕಿರಣ ಯಂತ್ರವನ್ನು ಕ್ಷಯರೋಗ ನಿರ್ಮೂಲನಾ ಘಟಕಕ್ಕೆ ಒದಗಿಸಿದ್ದು ಜಿಲ್ಲೆಯಲ್ಲಿ ಪ್ರಥಮ ಭಾರಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದ್ದು ರೋಗಿಗಳು ಇದರ ಸದುಪಯೋಗವನ್ನು ಪಡೆದುಕೊಂಡರು. ಈ ಸಂದರ್ಭದಲ್ಲಿ ವೈದ್ಯಾಧಿಕಾರಿ ಡಾ. ಚರಿತ ಕುಲಕರ್ಣಿ, ಆರೋಗ್ಯ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು ಮತ್ತು ಫಲಾನುಭವಿಗಳುಹಾಗೂ ಸಾರ್ವಜನಿಕರು ಹಾಜರಿದ್ದರು.