ಮಂಡ್ಯ: ಪಾಕಿಸ್ತಾನದಲ್ಲಿ ಅಡಗಿರುವ ಉಗ್ರರ ನೆಲೆಗಳ ಮೇಲೆ ಭಾರತ ಆಪರೇಷನ್ ಸಿಂಧೂರ ಮೂಲಕ ದಾಳಿಮಾಡಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೇಂದ್ರ ಸರ್ಕಾರದ ಸೂಚನೆಯಂತೆ ಎಲ್ಲೆಡೆ ಅಣುಕು ಕವಾಯತು ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮಂಡ್ಯ ಜಿಲ್ಲೆಯಲ್ಲಿ ಸರ್ಕಾರಿ ಮತ್ತು ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿರುವ ಮುಖ್ಯಮಂತ್ರಿಗಳು ಮದ್ದೂರು ಕಾಫಿ ಡೇ ಸಮೀಪದ ಗೆಜ್ಜಲಗೆರೆ ಹೆಲಿಪ್ಯಾಡ್ ನಲ್ಲಿ ಕಾರ್ಯಕ್ರಮಕ್ಕೆ ತೆರಳುವ ಮುನ್ನ ಮಾಧ್ಯಮವದರೊಂದಿಗೆ ಮಾತನಾಡಿದರು.
ಅಣೆಕಟ್ಟುಗಳ ಸುರಕ್ಷತೆಯ ದೃಷ್ಟಿಯಲ್ಲಿ ರಾಜ್ಯಾದ್ಯಂತ ಎಚ್ಚರಿಕೆ ವಹಿಸಲಾಗಿದ್ದು, ಯಾವ ಘಳಿಗೆಯಲ್ಲಿ ಏನಾದರೂ ಆಗಬಹುದು ಎಂದು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.
ಮುಜರಾಯಿ ಇಲಾಖೆ ದೇವಾಲಯಗಳಲ್ಲಿ ಪೂಜೆ ಸಲ್ಲಿಸುವ ಬಗ್ಗೆ ಸಚಿವ ರಾಮಲಿಂಗಾರೆಡ್ಡಿ ಕ್ರಮ ತೆಗೆದುಕೊಂಡಿದ್ದಾರೆ ಎಂದು ಹೇಳಿದರು.
ಪಾಕಿಸ್ತಾನದ ಪ್ರಜೆಗಳನ್ನು ಗಡಿಪಾರು ಮಾಡಿಲ್ಲ ಎಂದು ಬಿಜೆಪಿ ಆರೋಪಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಗಡಿಪಾರು ಮಾಡಲಾಗಿದೆ. ಮೈಸೂರಿನಲ್ಲಿ ಇರುವವರು ನ್ಯಾಯಾಲಯದ ಮೊರೆ ಹೋಗಿದ್ದಾರೆ. ಅಂಥವರು ಮಾತ್ರ ಉಳಿದುಕೊಂಡಿರುವುದು ಬಿಟ್ಟರೆ ಬಹುತೇಕ ಎಲ್ಲರೂ ಗಡೀಪಾರು ಆಗಿದ್ದಾರೆ, ಎಷ್ಟು ಜನ ಉಳಿದಿದ್ದಾರೆ ಎಂಬ ಮಾಹಿತಿ ಇಲ್ಲ ಎಂದರು.