ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶದ ಬಳಿಕ ದಕ್ಷಿಣ ಭಾರತದಲ್ಲಿ ಹೊಸ ಸಂಚಲನ ಮೂಡಿಸಿದ್ದಾರೆ ನಟ ವಿಜಯ್. ಬರೋಬ್ಬರಿ 108 ಸ್ಥಾನಗಳಲ್ಲಿ ಭರ್ಜರಿ ಗೆಲುವು ಸಾಧಿಸಿರುವ ದಳಪತಿ ವಿಜಯ್ ನೇತೃತ್ವದ ಟಿವಿಕೆ ಪಕ್ಷ ರಾಜ್ಯದಲ್ಲಿ ಅತಿದೊಡ್ದ ಪಕ್ಷವಾಗಿ ಹೊರಹೊಮ್ಮಿದೆ. ಈ ಹಿನ್ನೆಲೆಯಲ್ಲಿ ನಟ ವಿಜಯ್ ಸರ್ಕಾರ ರಚಿಸಲು ಮುಂದಾಗಿದ್ದಾರೆ.
ತಮಿಳುನಾಡು ಚುನಾವಣೆಯಲ್ಲಿ ಮೊದಲ ಬಾರಿಗೆ ನೂತನ ಪಕ್ಷದೊಂದಿಗೆ ಸ್ಪರ್ಧಿಸಿ ಹೊಸ ಚರಿತ್ರೆ ಸೃಷ್ಟಿಸಿರುವ ದಳಪತಿ ವಿಜಯ್ ಗೆಲುವಿನ ಬಳಿಕ ಮೊದಲ ಬಾರಿ ಪಕ್ಷದ ಸಭೆ ನಡೆಸಿದರು. ಸಭೆಯಲ್ಲಿ ಚುನಾವಣೆಯಲ್ಲಿ ಗೆದ್ದ ಎಲ್ಲಾ 107 ಕ್ಷೇತ್ರಗಳ ಶಾಸಕರು ಭಾಗಿಯಾಗಿದ್ದರು.
ಪಣಿಯೂರಿನಲ್ಲಿರುವ ಟಿವಿಕೆ ಪಕ್ಷದ ಕಚೇರಿಯಲ್ಲಿ ನಡೆದ ಸಭೆಯಲ್ಲಿ ವಿಜಯ್ ಅವರನ್ನು ಶಾಸಕಾಂಗ ಪಕ್ಷದ ನಾಯಕನನ್ನಾಗಿ ಆಯ್ಕೆ ಮಾಡಲಾಗಿದೆ. ಸಭೆಯಲ್ಲಿದ್ದ ಎಲ್ಲಾ 107 ಶಾಸಕರು ಒಮ್ಮತದಿಂದ ವಿಜಯ್ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಿದ್ದಾರೆ.
ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಧುರೈ ಸೆಂಟ್ರಲ್ ಟಿವಿಕೆ ಶಾಸಕ ಮಾದರ್ ಬದ್ರುದ್ದೀನ್, 130-150 ಶಾಸಕರ ಬೆಂಬಲದೊಂದಿಗೆ ಟಿವಿಕೆ ಸರ್ಕಾರ ರಚಿಸುವುದು ಖಚಿತ. ವಿಜಯ್ ಅವರ ನೇತೃತ್ವದಲ್ಲಿ ತಮಿಳುನಾಡಿನಲ್ಲಿ ಹೊಸ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ತಿಳಿಸಿದ್ದಾರೆ.
ಟಿವಿಕೆ 108 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಸರ್ಕಾರ ರಚನೆಗೆ ಇನ್ನೂ ಹತ್ತು ಶಾಸಕರ ಬೆಂಬಲ ಅಗತ್ಯವಿದೆ. ಈ ನಿಟ್ಟಿನಲ್ಲಿ ಟಿವಿಕೆ ಬೇರೆ ಪಕ್ಷದ ಬೆಂಬಲ ಪಡೆದು ಸರ್ಕಾರ ರಚನೆಗೆ ಮುಂದಾಗಿದೆ ಎಂದು ತಿಳಿಸಿದರು.
ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಹೊಸ ದಾಖಲೆ ಬರೆದಿರುವ ನಟ ದಳಪತಿ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಸರ್ಕಾರ ರಚನೆಗೆ ಮುಂದಾಗಿದೆ. ನಟ ದಳಪತಿ ವಿಜಯ್ ಈಗಾಗಲೇ ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ.
ನೂತನ ಪಕ್ಷ ಸ್ಥಾಪನೆಯೊಂದಿಗೆ ಮೊದಕ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಿ ಬರೋಬ್ಬರಿ 108 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಮೂಲಕ ಟಿವಿಕೆ ತಮಿಳುನಾಡಿನಲ್ಲಿ ಅತಿದೊಡ್ದ ಪಕ್ಷವಾಗಿ ಹೊರಹೊಮ್ಮಿದೆ. ನಟ ದಳಪತಿ ವಿಜಯ್ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದರು. ಎರಡೂ ಕ್ಷೇತ್ರಗಳಲ್ಲಿಯೂ ಅಭೂತಪೂರ್ವ ಗೆಲುವು ಸಾಧಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಒಂದು ಕ್ಷೇತ್ರಕ್ಕೆ ರಾಜೀನಾಮೆ ನೀಡಿ, ಒಂದು ಕ್ಷೇತ್ರವನ್ನು ಮಾತ್ರ ಉಳಿಸಿಕೊಳ್ಳಲು ತೀರ್ಮಾನಿಸಿದ್ದಾರೆ.ಹೀಗಾಗಿ ತಿರುಚ್ಚಿ ಪೂರ್ವ ಕ್ಷೇತ್ರಕ್ಕೆ ರಾಜೀನಾಮೆ ನೀಡಿ ಪೆರಂಬೂರು ಕ್ಷೇತ್ರದಿಂದ ಶಾಸಕರಾಗಿ ಮುಂದುವರೆಯಲು ನಿರ್ಧರಿಸಿದ್ದಾರೆ.
ವಿಜಯ್ ರಾಜೀನಾಮೆಯಿಂದ ತೆರವಾಗುವ ಸ್ಥಾನಕ್ಕೆ ಉಪಚುನಾವಣೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಕು.ಪ.ಕೃಷ್ಣನ್ ಅವರಿಗೆ ಟಿವಿಕೆ ಟಿಕೆಟ್ ನೀಡಲು ತೀರ್ಮಾನಿಸಿದೆ. ಈ ನಿಟ್ಟಿನಲ್ಲಿ ಶೀಘ್ರವೇ ಸಭೆ ನಡೆಸಿ ಟಿವಿಕೆ ತಿರುಚ್ಚಿ ಪೂರ್ವ ಕ್ಷೇತ್ರದಿಂದ ಕೃಷ್ಣನ್ ಅವರನ್ನು ಅಧಿಕೃತ ಅಭ್ಯರ್ಥಿಯನ್ನಾಗಿ ಘೋಷಿಸಲಿದೆ ಎಂದು ತಿಳಿದುಬಂದಿದೆ.



