ಚಾಮರಾಜನಗರ: ಜಿಲ್ಲೆಯ ಪ್ರಸಿದ್ದ ಪ್ರವಾಸಿ ತಾಣ ಭರಚುಕ್ಕಿಯಲ್ಲಿ ಇದೇ ಆಗಸ್ಟ್ ೧೦ರಂದು ಜಲಪಾತೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಇದಕ್ಕಾಗಿ ಸಕಲ ಸಿದ್ದತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯು ವೈವಿಧ್ಯಮಯ ಹಲವು ಪ್ರವಾಸಿ ತಾಣಗಳನ್ನು ಹೊಂದಿದ್ದು, ಚಲುವ ಚಾಮರಾಜನಗರ ಹೆಸರಿನಡಿ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಜಲಪಾತೋತ್ಸವವನ್ನು ಆಗಸ್ಟ್ ೧೦ರಂದು ಆಯೋಜನೆ ಮಾಡಲಾಗುತ್ತಿದೆ. ಈ ಕಾರ್ಯಕ್ರಮಕ್ಕೆ ಆಗಸ್ಟ್ ೧೦ರಂದು ಸಂಜೆ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಚಾಲನೆ ನೀಡಲಿದ್ದು, ಜಿಲ್ಲಾ ಉಸ್ತುವಾರಿ ಸಚಿವರು ಸೇರಿದಂತೆ ವಿವಿಧ ಇಲಾಖೆಗಳ ಸಚಿವರು, ಶಾಸಕರು, ಗಣ್ಯರು ಆಗಮಿಸಲಿದ್ದಾರೆ. ಈ ವೈಶಿಷ್ಟ್ಯ ಕಾರ್ಯಕ್ರಮ ಯಶಸ್ವಿಗೆ ಅಧಿಕಾರಿಗಳು ಪೂರ್ಣ ಪ್ರಮಾಣದಲ್ಲಿ ತೊಡಗಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಯವರು ನಿರ್ದೇಶನ ನೀಡಿದರು.
ಜಲಪಾತದ ಸೊಬಗನ್ನು ಬಣ್ಣದ ಬೆಳಕಿನಲ್ಲಿ ನೋಡುವ ಅವಕಾಶವನ್ನು ಮಾಡಲಾಗುತ್ತಿದೆ. ಜಲಪಾತೋತ್ಸವ ವೇದಿಕೆ ಕಾರ್ಯಕ್ರಮವು ನಡೆಯಲಿದ್ದು, ವಿವಿಧ ಬಗೆಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗುತ್ತಿದೆ. ಈ ಎಲ್ಲವು ಸುಸೂತ್ರವಾಗಿ ನೆರವೇರಲು ಅಧಿಕಾರಿಗಳಿಗೆ ಜವಾಬ್ದಾರಿ ನೀಡಲಾಗಿದೆ. ನಿಯೋಜನೆಗೊಂಡ ಅಧಿಕಾರಿಗಳು ಎಲ್ಲ ಸಿದ್ದತೆಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕೆಂದು ತಿಳಿಸಿದರು.
ಕಾರ್ಯಕ್ರಮಕ್ಕೆ ಹೆಚ್ಚಿನ ಜನರು ಪ್ರವಾಸಿಗರು ಆಗಮಿಸಲಿರುವ ಹಿನ್ನೆಲೆಯಲ್ಲಿ ವಾಹನ ಸಂಚಾರಕ್ಕೆ ಯಾವುದೇ ಅಡಚಣೆಯಾಗದಂತೆ ವ್ಯವಸ್ಥೆ ಕೈಗೊಳ್ಳಬೇಕು. ವಾಹನಗಳ ನಿಲುಗಡೆಗೆ ನಿಗದಿತ ಸ್ಥಳವನ್ನು ಗೊತ್ತು ಮಾಡಬೇಕು. ವಿವಿಧ ಭಾಗಗಳಿಂದ ಬರುವ ವಾಹನಗಳಿಗೆ ಸಂಚರಿಸಬೇಕಾದ ಮಾರ್ಗಗಳ ಬಗ್ಗೆ ಮಾಹಿತಿ ನೀಡಬೇಕು. ಜನ, ವಾಹನ ದಟ್ಟಣೆ ಆಗದಂತೆ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿಯವರು ತಿಳಿಸಿದರು.
ಜಲಪಾತೋತ್ಸವ ವೇದಿಕೆ ಬಳಿ ವಿವಿಧ ಮಳಿಗೆಗಳನ್ನು ತೆರೆಯಬೇಕು. ಆಹಾರ ತಿನಿಸು ಮಳಿಗೆಗಳಿಗೂ ಅವಕಾಶ ಮಾಡಿಕೊಡಲಾಗುತ್ತಿದೆ. ಬರುವ ಸಾರ್ವಜನಿಕರಿಗೆ, ಪ್ರವಾಸಿಗರಿಗೆ ಆಕರ್ಷಿಸುವ ರೀತಿಯಲ್ಲಿ ಎಲ್ಲಾ ವ್ಯವಸ್ಥೆಗಳು ಇರಬೇಕಿದೆ. ಹೀಗಾಗಿ ಎಲ್ಲ ಅವಶ್ಯಕ ಕ್ರಮಗಳನ್ನು ತುರ್ತಾಗಿ ನಿರ್ವಹಿಸುವಂತೆ ಜಿಲ್ಲಾಧಿಕಾರಿಯವರು ಸೂಚಿಸಿದರು.
ಕುಡಿಯುವ ನೀರು, ಶೌಚಾಲಯ, ಇತರೆ ಮೂಲ ಸೌಕರ್ಯಗಳು ಇರಬೇಕು. ಹೆಚ್ಚು ಜನರು ಆಗಮಿಸುವ ಹಿನ್ನೆಲೆಯಲ್ಲಿ ವೈದ್ಯಕೀಯ ತಂಡವು ನಿಯೋಜನೆಯಾಗಬೇಕು. ಸ್ವಚ್ಚತೆಯನ್ನೂ ಸಹ ಕಾಪಾಡಬೇಕು. ಪ್ಲಾಸ್ಟಿಕ್ ಬಳಸದಂತೆ ಜಾಗೃತಿ ಮೂಡಿಸಬೇಕು. ಒಟ್ಟಾರೆ ಕಾರ್ಯಕ್ರಮವು ಅರ್ಥಪೂರ್ಣ ಹಾಗೂ ವಿಶಿಷ್ಟವಾಗಿ ನಡೆಯಲು ಅಧಿಕಾರಿಗಳು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ತಿಳಿಸಿದರು.