ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೊರತೆ ಹಾಗೂ ಬರದ ಆತಂಕದ ನಡುವೆಯೇ ಮುಖ್ಯಮಂತ್ರಿ ರೈತರಿಗೆ “ಬೆಳೆ ಬೆಳೆಯದಿರಿ” ಎಂದು ನೀಡಿರುವ ಹೇಳಿಕೆ ರೈತರ ಆತ್ಮಸ್ಥೈರ್ಯ ಕುಗ್ಗಿಸುವಂತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ.ವಿಜಯೇಂದ್ರ ತೀವ್ರ ಟೀಕಿಸಿದ್ದಾರೆ.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಚೇರಿ ಜಗನ್ನಾಥ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕೃತಿ ವೈಪರೀತ್ಯದ ಸಂದರ್ಭದಲ್ಲಿ ಸರ್ಕಾರ ರೈತರಿಗೆ ಧೈರ್ಯ ತುಂಬಬೇಕಾಗಿತ್ತು. ಆದರೆ, ಬೆಳೆ ಬೆಳೆಯದಂತೆ ಸಲಹೆ ನೀಡುವ ಮೂಲಕ ಮುಖ್ಯಮಂತ್ರಿ ನಿರಾಸೆ ಮೂಡಿಸಿದ್ದಾರೆ ಎಂದು ಆರೋಪಿಸಿದರು. ಮುಂದಿನ 15ರಿಂದ 20 ದಿನಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಮುಖ್ಯಮಂತ್ರಿಗಳ ಮಾತು ನಂಬಿ ರೈತರು ಬಿತ್ತನೆ ಮಾಡದೇ ಇದ್ದರೆ ಅದರ ಹೊಣೆ ಯಾರು ಹೊರುತ್ತಾರೆ? ಎಂದು ಪ್ರಶ್ನಿಸಿದರು.
ಇನ್ನೂ ರಾಜ್ಯದಲ್ಲಿ ಶೇ.50ರಿಂದ 60ರಷ್ಟು ಮಳೆ ಕೊರತೆಯಿದ್ದರೂ ಸರ್ಕಾರ ಬರ ನಿರ್ವಹಣೆಗೆ ಅಗತ್ಯ ಕ್ರಮ ಕೈಗೊಂಡಿಲ್ಲ. ಜಿಲ್ಲಾಧಿಕಾರಿಗಳಿಗೆ ಅನುದಾನ ಬಿಡುಗಡೆ ಮಾಡಿಲ್ಲ, ಜಾನುವಾರುಗಳ ಸಂರಕ್ಷಣೆಗೆ ಯಾವುದೇ ವಿಶೇಷ ಯೋಜನೆ ಘೋಷಿಸಿಲ್ಲ ಎಂದು ವಿಜಯೇಂದ್ರ ಟೀಕಿಸಿದರು.
ಇದೇ ವೇಳೆ ಎಸ್ಐಆರ್ ಪ್ರಕ್ರಿಯೆ ಕುರಿತು ಮಾತನಾಡಿದ ಅವರು, ಎಸ್ಐಆರ್ ನೆಪದಲ್ಲಿ ಸರ್ಕಾರ ಮುಂಗಾರು ಅಧಿವೇಶನ ಮುಂದೂಡಲು ಯತ್ನಿಸುತ್ತಿದೆ. ಕಾಂಗ್ರೆಸ್ ಪಕ್ಷದಲ್ಲಿ ಸಂಪುಟ ವಿಸ್ತರಣೆಗೆ ಒಳಜಗಳ ನಡೆಯುತ್ತಿರುವುದೇ ಇದಕ್ಕೆ ಕಾರಣ ಎಂದು ಆರೋಪಿಸಿದರು.
ಮಸೀದಿಗಳಲ್ಲಿ ಹಾಗೂ ಖಾಸಗಿ ಸ್ಥಳಗಳಲ್ಲಿ ಎಸ್ಐಆರ್ ಪ್ರಕ್ರಿಯೆ ನಡೆಸಲಾಗುತ್ತಿದೆ ಎಂಬ ಆರೋಪವನ್ನೂ ಪುನರುಚ್ಚರಿಸಿದ ವಿಜಯೇಂದ್ರ, ಈ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ನೀಡಿರುವುದಾಗಿ ತಿಳಿಸಿದರು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ವಿವಿಧ ಸಮುದಾಯಗಳ ಮೇಲಿನ ದಾಳಿಗಳು ಹೆಚ್ಚಾಗಿವೆ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.



