ಬೆಂಗಳೂರು: ಮುಖ್ಯಮಂತ್ರಿ ಹುದ್ದೆ ಸದ್ಯಕ್ಕೆ ಖಾಲಿ ಇಲ್ಲ. ಹೀಗಾಗಿ ಮುಂದಿನ ಮುಖ್ಯಮಂತ್ರಿಯ ಕುರಿತು ಚರ್ಚೆ ಮಾಡುವ ಅಗತ್ಯವೂ ಇಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋರ್ಟ್ನಲ್ಲಿ ಪ್ರಕರಣದ ವಿಚಾರಣೆ ಹಂತದಲ್ಲಿರುವುದು ನಿಜ. ಅಲ್ಲಿ ಏನಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ. ಎಲ್ಲದಕ್ಕೂ ಮೊದಲೇ ಮುಂದಿನ ಮುಖ್ಯಮಂತ್ರಿ ಕುರಿತು ಚರ್ಚೆ ಮಾಡುವ ಅಗತ್ಯ ಸದ್ಯಕ್ಕಂತೂ ನನಗೆ ಕಾಣಿಸುತ್ತಿಲ್ಲ ಎಂದು ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಪಾಲರು ನೀಡಿರುವ ಅಭಿಯೋಜನೆಗೆ ಪೂರ್ವಾನುಮತಿಗೆ ತಡೆಯಾಜ್ಞೆ ಕೋರಿ ನ್ಯಾಯಾಲಯಕ್ಕೆ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಅಡ್ವೊಕೇಟ್ ಜನರಲ್ ಹಾಗೂ ಇತರ ವಕೀಲರು ವಾದವನ್ನು ಮುಂದುವರೆಸಲಿದ್ದಾರೆ. ಇತ್ತೀಚಿನ ವಿಚಾರಣೆಯಲ್ಲಿ ನ್ಯಾಯಾಧೀಶರು 12ನೇ ತಾರೀಕಿನೊಳಗೆ ಪ್ರಕರಣವನ್ನು ಇತ್ಯರ್ಥಪಡಿಸುವುದಾಗಿ ತಿಳಿಸಿದ್ದಾರೆ ಎಂದರು.
ಮುಡಾ ಪ್ರಕರಣದಿಂದ ರಾಜ್ಯಸರ್ಕಾರದ ಆಡಳಿತದ ಮೇಲೆ ಯಾವುದೇ ಪರಿಣಾಮ ಬೀರಿಲ್ಲ. ಎಲ್ಲಾ ಸಚಿವರೂ ಆಯಾ ಇಲಾಖೆಗಳ ಕಾರ್ಯಕಲಾಪಗಳನ್ನು ನಿರ್ವಹಣೆ ಮಾಡುತ್ತಿದ್ದಾರೆ. ಮುಖ್ಯ ಕಾರ್ಯದರ್ಶಿಯವರು ತಮ ಪಾಲಿನ ಜವಾಬ್ದಾರಿಯನ್ನ ನಿಭಾಯಿಸುತ್ತಿದ್ದಾರೆ. ಹೈಕೋರ್ಟ್ನಲ್ಲಿ ಪ್ರಕರಣದ ವಿಚಾರಣೆ ಇರುವುದರಿಂದ ಮುಖ್ಯಮಂತ್ರಿಯವರು ತಮ ಕಲಾಪಗಳನ್ನು ನಿಲ್ಲಿಸಿರಬಹುದು. ಉಳಿದಂತೆ ಎಲ್ಲಾ ಆಡಳಿತ ವ್ಯವಸ್ಥೆ ಮುಂದುವರೆದಿದೆ ಎಂದರು.