ಶಿವಮೊಗ್ಗ: ಬಿಜೆಪಿಯವರ ವಿರುದ್ದ ಜನರ ಬಳಿ ಹೋಗುತ್ತೇವೆ. ಅವರ ಕಾಲದಲ್ಲಿ ೨೫ – ೩೦ ಹಗರಣ ನಡೆದಿವೆ ಅದನ್ನು ಜನರ ಮುಂದೆ ತಿಳಿಸುತ್ತೇವೆ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರು ತಿಳಿಸಿದ್ದಾರೆ.
ಶಿವಮೊಗ್ಗದಲ್ಲಿ ಇಂದು ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾರಿಷಸ್ ಗೆ ೧೦ ಸಾವಿರ ಕೋಟಿ ತೆಗೆದುಕೊಂಡು ಹೋಗಿದ್ದಾರೆ. ಬಿಜೆಪಿಯವರು ಮೊದಲು ಈ ಆರೋಪಕ್ಕೆ ಉತ್ತರ ಕೊಡಲಿ. ನಾವು ಸಹ ಹೋರಾಟ ಮಾಡುತ್ತೇವೆ. ನ್ಯಾಯಾಂಗ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.
ಮುಡಾ ಹಗರಣ ಸಂಬಂಧ ಬಿಜೆಪಿ ನಡೆಸುತ್ತಿರುವ ಪಾದಯಾತ್ರೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಸಿಎಂ ಸಿದ್ದರಾಮಯ್ಯ ಯಾವುದೇ ಹಗರಣ ಮಾಡಿಲ್ಲ. ಬಿಜೆಪಿಯವರು ವಿನಾಃ ಕಾರಣ ಹೋರಾಟ ನಡೆಸುತ್ತಿದ್ದಾರೆ. ೪೦ ವರ್ಷದ ರಾಜಕಾರಣದಲ್ಲಿ ಸಿದ್ದರಾಮಯ್ಯ ಮೇಲೆ ಒಂದೇ ಒಂದು ಕಪ್ಪು ಚುಕ್ಕೆ ಇಲ್ಲ. ದೇವರಾಜ್ ಅರಸು ನಂತರ ಒಬಿಸಿ ಸಮುದಾಯದ ಸಿದ್ದರಾಮಯ್ಯ ಸಿಎಂ ಆಗಿದ್ದಾರೆ. ಬಿಜೆಪಿಯವರಿಗೆ ಇದು ಸಹಿಸಲಾಗುತ್ತಿಲ್ಲ. ರಾಜ್ಯಪಾಲರನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂದು ಹೇಳಿದರು.