ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಪಟ್ಟಿಯಲ್ಲಿ ಯಾವುದೇ ರೀತಿಯ ಪರಿಷ್ಕರಣೆ ನಡೆದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗುರುವಾರ ವಿಧಾನಸೌಧದಲ್ಲಿ ಸ್ಪಷ್ಟಪಡಿಸಿದರು.
ಯೋಜನೆಯ ಹಣ ವಿತರಣೆ ಸಂಬಂಧಿತ ಪ್ರಶ್ನೆಗೆ ಉತ್ತರಿಸುತ್ತಿದ್ದ ಅವರು, ತಾಂತ್ರಿಕ ಸಮಸ್ಯೆ ಏನೂ ಇಲ್ಲ ಎಂದರು. ಈಗಾಗಲೇ ಏಪ್ರಿಲ್ ತಿಂಗಳ ಹಣ ವಿತರಣೆ ನಡೆದಿದೆ ಮತ್ತು ಮೇ ತಿಂಗಳ ಹಣ ಬಿಡುಗಡೆಗೆ ಹಣಕಾಸು ಇಲಾಖೆಯಿಂದ ಅನುದಾನ ನಿರೀಕ್ಷೆಯಲ್ಲಿದೆ ಎಂದರು.
ಈ ಬಾರಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಬದಲು ಜಿಲ್ಲಾ ಹಾಗೂ ತಾಲೂಕು ಪಂಚಾಯತ್ಗಳ ಮೂಲಕ ಹಣ ವಿತರಿಸಲಾಗುತ್ತಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಯೋಜನೆಯ ಬಗ್ಗೆ ಹೆಚ್ಚಿನ ಕಾಳಜಿ ಹೊಂದಿದ್ದು, ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಲಾಗುತ್ತಿದೆ. ಕೇಂದ್ರ ಸರ್ಕಾರದ ನಿಯಮಗಳ ಪ್ರಕಾರ ಹಣ ವಿತರಣೆಗೆ ಸ್ವಲ್ಪ ವಿಳಂಬವಾಗುತ್ತಿದೆ.
ಪ್ರತಿ ತಿಂಗಳು 10,000 ರಿಂದ 15,000 ಫಲಾನುಭವಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ನೋಂದಣಿ ಮಾಡಿಕೊಂಡ ಎಲ್ಲಾ ಫಲಾನುಭವಿಗಳಿಗೆ ನಿಗದಿತ ಹಣ ತಲುಪುತ್ತಿದೆ ಎಂದು ಸಚಿವೆ ಹೇಳಿದರು.