ಬೆಳಗಾವಿ: ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಅಧಿಕಾರಿಗಳು ಹೆಚ್ಚಿನ ಶ್ರಮ ವಹಿಸಬೇಕು. ಬಾಲಕಾರ್ಮಿಕರ ರಕ್ಷಣೆಗೆ ಟಾಸ್ಪಾಸ್ಕ್ ರಚಿಸುವ ಬಗ್ಗೆ ಚಿಂತನೆ ನಡೆಸಲಾಗಿದ್ದು, ಸದ್ಯದಲ್ಲೇ ತೀರ್ಮಾನ ತೆಗೆದುಕೊಳ್ಳಲಾಗು ವುದು. ಬಾಲ ಕಾರ್ಮಿಕರು ಕಂಡು ಬಂದಲ್ಲಿ ತಕ್ಷಣ ಮಕ್ಕಳ ರಕ್ಷಣಾ ಕಾರ್ಯ ಕೈಗೊಳ್ಳಬೇಕು ಎಂದು ಕಾರ್ಮಿಕ ಇಲಾಖೆ ಸಚಿವ ಸಂತೋಷ್ ಲಾಡ್ ಅವರು ತಿಳಿಸಿದರು.
ನಗರದ ಪ್ರವಾಸಿ ಮಂದಿರದಲ್ಲಿ ಬುಧವಾರ ನಡೆದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಸಭೆಯಲ್ಲಿ ಬಾಲ ಕಾರ್ಮಿಕ ಪದ್ಧತಿ ನಿರ್ಮೂಲೆ ಕುರಿತು ಜಾಗೃತಿ ಕಾರ್ಯಕ್ರಮಗಳ ಮೂಲಕ ಹೆಚ್ಚಿನ ಪ್ರಚಾರ ಕೈಗೊಳ್ಳಿ. ಮಕ್ಕಳು ಯಾವುದೇ ಕಾರಣಕ್ಕೂ ಶಿಕ್ಷಣದಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು. ಈ ಪದ್ಧತಿ ಮಕ್ಕಳ ಭವಿಷ್ಯಕ್ಕೆ ಹಾನಿಕಾರಕ. ಇದರ ಕುರಿತು ಅಧಿಕಾರಿಗಳು ನಿರ್ಲಕ್ಷ್ಯ ತೋರಬಾರದು ಎಂದು ಸೂಚನೆ ನೀಡಿದರು. ಕಾರ್ಮಿಕ ಭವನ ನಿರ್ಮಾಣ ಈಗಾಗಲೇ ಜಿಲ್ಲೆಯಲ್ಲಿದೆ.
ಸ್ಥಳೀಯ ಕಾರ್ಮಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ತಾಲೂಕಾ ಮಟ್ಟದಲ್ಲಿ ಕೂಡ ಕಾರ್ಮಿಕ ಭವನ, ಕಾರ್ಮಿಕ ಇಲಾಖೆ ಕಚೇರಿಗಳು ಇರಲೇಬೇಕು ಎಂದು ಸಚಿವ ಸಂತೋಷ್ ಲಾಡ್ ತಿಳಿಸಿದರು. 90% ಪ್ರತಿಶತ ಇಂಡಸ್ಟ್ರಿಯಲ್ ಏರಿಯಾ ಮಚ್ಚೆಯಲ್ಲಿ ಭಾಗದಲ್ಲಿ ಇರುವುದರಿಂದ 2 ಎಕರೆ ಜಾಗೆಯಲ್ಲಿ ಇ.ಎಸ್.ಐ ಆಸ್ಪತ್ರೆ ನಿರ್ಮಾಣಕ್ಕೆ ಈಗಾಗಲೇ ಯೋಜನೆ ರೂಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಮಾಹಿತಿ ನೀಡಿದರು.
ಅಲ್ಪಸಂಖ್ಯಾತರ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಸತಿ ನಿಲಯಗಳಲ್ಲಿ ಕಾರ್ಯನಿರ್ವಹಿಸುವ ಹೊರಗುತ್ತಿಗೆ ನೌಕರರಿಗೆ ಏಜೆನ್ಸಿಗಳು ಸರಿಯಾದ ಇ.ಎಸ್.ಐ-ಪಿ.ಎಫ್ ಪಾವತಿಸುತಿಲ್ಲ ಮತ್ತು ಪ್ರತಿ ನೌಕರ ತಿಂಗಳ ವೇತನದಲ್ಲಿ 1 ರಿಂದ 2 ಸಾವಿರ ಕಡಿತಗೊಳಿಸುತ್ತಿರುವ ಮಾಹಿತಿ ಲಭ್ಯವಿದೆ.
ಈ ಕುರಿತು ಈಗಾಗಲೇ ವಿವಿಧ ಇಲಾಖೆಯ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆ ಕರೆದು ವಿಷಯ ಚರ್ಚಿಸಿ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದರು. ಸುಮಾರು 20 ವರ್ಷಗಳಿಂದ ವರ್ಷಗಳಿಂದ ವಿವಿಧ ಇಲಾಖೆಯಲ್ಲಿ ಹೊರಗುತ್ತಿಗೆ ನೌಕರರು ಕಾರ್ಯ ನಿರ್ವಹಿಸಿದ್ದಾರೆ. ಅವರಿಗೆ ಸರಿಯಾದ ಇ.ಎಸ್.ಐ-ಪಿ.ಎಫ್ ಬಾಗೆ ಮಾಹಿತಿ ಕೂಡ ಇರುವದಿಲ್ಲ. ಹೊರಗುತ್ತಿಗೆ ಏಜೆನ್ಸಿಗಳು ಸರಿಯಾದ ಪ್ರತಿ ಮಾಸಿಕ ವೇತನ ನೀಡುತ್ತಿಲ್ಲ ಅಂತಹ ಏಜೆನ್ಸಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕಾರ್ಮಿಕ ಇಲಾಖೆ ಸಚಿವ ಸಂತೋಷ್ ಲಾಡ್ ಅವರು ಸೂಚನೆ ನೀಡಿದರು.
ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ, ಕುಡಚಿ ಶಾಸಕ ಮಹೇಶ್ ತಮ್ಮಣ್ಣವರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಕಾಧಿಕಾರಿ ಹರ್ಷಲ್ ಭೋಯರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೀಮಾಶಂಕರ ಗುಳೇದ, ಡಿಸಿಪಿ ಸ್ನೇಹಾ ಉಪಸ್ಥಿತರಿದ್ದರು.