ಮಂಗಳೂರು (ದಕ್ಷಿಣ ಕನ್ನಡ): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಮುಂಜಾನೆಯಿಂದ ಭಾರೀ ಮಳೆ ಸುರಿಯಿತು. ಜಿಲ್ಲೆಯಲ್ಲಿ ಮಂಗಳವಾರ ಮುಸ್ಸಂಜೆಯಿಂದಲೇ ಮೋಡ ಕವಿದ ವಾತಾವರಣ ಕಂಡುಬಂದಿತ್ತು. ಕೆಲವೆಡೆ ರಾತ್ರಿಯಿಂದಲೇ ತುಂತುರು ಮಳೆ ಸುರಿಯಿತು. ಮಂಗಳೂರು ನಗರದಲ್ಲಿ ಬೆಳಗ್ಗೆ ಗುಡುಗು ಸಹಿತ ತುಂತುರು ಮಳೆಯಾಗಿದೆ.ನಗರ ಹೊರವಲಯದ ಉಳ್ಳಾಲ, ಕೊಣಾಜೆ, ಮುಡಿಪು, ಮಂಜನಾಡಿ ಸೇರಿದಂತೆ ಹಲವೆಡೆ ಇಂದು ಬೆಳಗ್ಗೆ ಉತ್ತಮ ಮಳೆಯಾಗಿದೆ.
ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ ತಾಲೂಕಿನಾದ್ಯಂತ ಮಳೆ ಸುರಿದಿದೆ. ಬಂಟ್ವಾಳ ತಾಲೂಕಿನ ಹಲವೆಡೆ ಉತ್ತಮ ಮಳೆಯಾಗಿದ್ದರೆ, ಬೆಳ್ತಂಗಡಿಯಲ್ಲಿ ಬೆಳಗ್ಗೆ 9 ಗಂಟೆಯ ಸುಮಾರಿಗೆ ಮಳೆ ಸುರಿಯಿತು. ಇನ್ನೂ ಮಳೆ ಸುರಿಯುವ ಸಾಧ್ಯತೆ ಇದ್ದು, ಜಿಲ್ಲಾದ್ಯಂತ ಮೋಡ ಕವಿದ ವಾತಾವರಣ ಮುಂದುವರಿದಿದೆ.