ಉಡುಪಿ: ಮಂಗಳೂರು ವಿಶ್ವವಿದ್ಯಾನಿಲಯ ಮತ್ತು ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಉಡುಪಿ ಜಿಲ್ಲಾ ಘಟಕದ ಜಂಟಿ ಸಹಯೋಗದೊಂದಿಗೆ ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿರುವ ಕಾಲೇಜುಗಳ ಯುವರೆಡ್ಕ್ರಾಸ್ ಘಟಕದ ವಿದ್ಯಾರ್ಥಿ ನಾಯಕರುಗಳಿಗೆ ಒಂದು ದಿನದ ತರಬೇತಿ ಕಾರ್ಯಕ್ರಮವು ರೆಡ್ಕ್ರಾಸ್ ಭವನದಲ್ಲಿ ನಡೆಯಿತು.
ಶ್ರೀ ಜನಾರ್ಧನ ಮತ್ತು ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ. ಎನ್.ಬಿ ವಿಜಯ ಬಲ್ಲಾಳ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಯುವಜನರು ಉತ್ತಮ ಪ್ರಜೆಗಳಾಗಿ ಆರೋಗ್ಯಯುತ ಜೀವನ ನಡೆಸಬೇಕು. ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಯೂತ್ ರೆಡ್ಕ್ರಾಸ್ ಘಟಕಗಳ ಮೂಲಕ ನಡೆಸಲಾಗುವ ಸಮಾಜಮುಖಿ ಕಾರ್ಯಚಟುವಟಿಕೆಗಳನ್ನು ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳುವುದರೊಂದಿಗೆ ಉತ್ತಮ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದರು.
ಯುವಜನರು ಒಳ್ಳೆಯ ಕನಸನ್ನು ಕಂಡು ಅದನ್ನು ಈಡೇರಿಸುವ ಕಡೆ ಗಮನಹರಿಸಬೇಕು. ವಿದ್ಯಾರ್ಥಿಗಳು ಸಕಾರಾತ್ಮಕ ಚಿಂತನೆಗಳನ್ನು ಜೀವನದಲ್ಲಿ ಅಳವಡಿಸಿಕೊಂಡು, ಪರಿಪೂರ್ಣ ವ್ಯಕ್ತಿಗಳಾಗಿ ಹೊರಹೊಮ್ಮಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಉಡುಪಿ ಜಿಲ್ಲಾ ಘಟಕದ ಸಭಾಪತಿ ಬಸ್ರೂರು ರಾಜೀವ್ ಶೆಟ್ಟಿ ಮಾತನಾಡಿ, ರೆಡ್ಕ್ರಾಸ್ ಸಂಸ್ಥೆಯ ಧ್ಯೇಯ, ಧೋರಣೆ ಹಾಗೂ ಸೇವೆಗಳು ಅತ್ಯಮೂಲವಾಗಿದ್ದು, ಅಂಗಸಂಸ್ಥೆಯಾದ ಯೂತ್ ರೆಡ್ಕ್ರಾಸ್ ಸಂಸ್ಥೆಯ ವಿದ್ಯಾರ್ಥಿಗಳು ಇದನ್ನು ಪಾಲಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ರೆಡ್ಕ್ರಾಸ್ ಹಾಗೂ ಡಿ.ಡಿ.ಆರ್.ಸಿ ಸದಸ್ಯರುಗಳು, ೭೪ ವಿವಿಧ ಕಾಲೇಜುಗಳ ಯೂತ್ರೆಡ್ ಕ್ರಾಸ್ ವಿದ್ಯಾರ್ಥಿ ನಾಯಕರುಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ರೆಡ್ಕ್ರಾಸ್ ಸಂಸ್ಥೆಯ ಗೌರವ ಕಾರ್ಯದರ್ಶಿ ಡಾ. ಗಣನಾಥ ಶೆಟ್ಟಿ ಎಕ್ಕಾರು ಸ್ವಾಗತಿಸಿ, ರಾಘವೇಂದ್ರ ಕರ್ವ ನಿರೂಪಿಸಿ, ಗೌರವ ಖಜಾಂಜಿ ರಮಾದೇವಿ ವಂದಿಸಿದರು. ತರಬೇತಿಯಲ್ಲಿ ಸಂಪನ್ಮೂಲ ವ್ಯಕ್ತಿಗಳಾದ ಐ.ಆರ್.ಸಿ.ಎಸ್ ಪ್ರಥಮ ಚಿಕಿತ್ಸೆಯ ಟ್ರೈನರ್ ಡಾ. ಕೀರ್ತಿ ಪ್ರಥಮ ಚಿಕಿತ್ಸೆಯ ಬಗ್ಗೆ ಮತ್ತು ಕುಂದಾಪುರ ಐ.ಆರ್.ಸಿ.ಎಸ್ ಬ್ಲಡ್ಬ್ಯಾಂಕ್ನ ತಾಂತ್ರಿಕ ಮುಖ್ಯಸ್ಥ ವಿರೇಂದ್ರ ರಕ್ತದಾನದ ಬಗ್ಗೆ ಮಾಹಿತಿ ನೀಡಿದರು.