ನವದೆಹಲಿ: ಒಂದು ರಾಷ್ಟ್ರ, ಒಂದು ಚುನಾವಣೆ ಪ್ರಸ್ತಾವನೆಗೆ ಇಂದು ಬುಧವಾರ ಕೇಂದ್ರ ಸಚಿವ ಸಂಪುಟದ ಒಪ್ಪಿಗೆ ಸಿಕ್ಕಿದೆ.
ಮಾಜಿ ರಾಷ್ಟ್ರಪತಿ ರಾಮ ನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿಯ ವರದಿಯನ್ನು ಕೇಂದ್ರ ಸಚಿವ ಸಂಪುಟದ ಮುಂದೆ ಮಂಡಿಸಿದ ನಂತರ ಈ ಮಹತ್ವದ ಬೆಳವಣಿಗೆ ನಡೆದಿದೆ.
ವರದಿ ಪ್ರಕಾರ ಕೇಂದ್ರ ಸರ್ಕಾರ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಈ ಬಗ್ಗೆ ಮಸೂದೆಯನ್ನು ತರಲಿದೆ. ಕಳೆದ ತಿಂಗಳು ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಮಾಡಿದ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಒಂದು ದೇಶ, ಒಂದು ಚುನಾವಣೆ ಕುರಿತು ಮಾತನಾಡಿದ ಬಳಿಕ ಈ ಬೆಳವಣಿಗೆ ನಡೆದಿದೆ.
ಪದೇ ಪದೇ ಚುನಾವಣೆಗಳು ನಡೆಯುವುದರಿಂದ ದೇಶದ ಪ್ರಗತಿಗೆ ಅಡ್ಡಿಯಾಗುತ್ತದೆ ಎಂದು ಪ್ರಧಾನಿ ಮೋದಿ ಹೇಳಿದ್ದರು.
ಪ್ರಸ್ತುತ ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರವು ತನ್ನ ಪ್ರಸ್ತುತ ಅಧಿಕಾರಾವಧಿಯಲ್ಲಿ ಒಂದು ರಾಷ್ಟ್ರ, ಒಂದು ಚುನಾವಣೆ ಜಾರಿಗೆ ತರಲಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿತ್ತು. ಪ್ರಧಾನಿ ಮೋದಿ ನೇತೃತ್ವದ ಎನ್ಡಿಎ ಸರ್ಕಾರದ ಮೂರನೇ ಅವಧಿಯ ೧೦೦ ದಿನಗಳನ್ನು ಪೂರೈಸಿದ ನಂತರ, ಆಡಳಿತಾರೂಢ ಮೈತ್ರಿಕೂಟದಲ್ಲಿನ ಒಗ್ಗಟ್ಟು ಉಳಿದ ಅವಧಿಯಲ್ಲೂ ಉಳಿಯುತ್ತದೆ ಎಂದು ಮೂಲಗಳು ತಿಳಿಸಿವೆ.