ಕೋಲಾರ: ಬೆಂಬಲ ಬೆಲೆ ಸಿಗದ ಹಿನ್ನೆಲೆ ಮಾವು ಬೆಳೆಗಾರರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇದೇ ಅಸಮಾಧಾನವು ಇಂದು ಕೋಲಾರದಲ್ಲಿ ರಸ್ತೆ ತಡೆ ಹಾಗೂ ಮಾವಿನ ಹಣ್ಣನ್ನು ಹೆದ್ದಾರಿಯಲ್ಲಿ ಸುರಿಯುವ ಮೂಲಕ ಮಹತ್ವದ ಪ್ರತಿಭಟನೆಗೆ ಕಾರಣವಾಯಿತು. ಕೋಲಾರದ ಹೊರವಲಯದಲ್ಲಿರುವ ಕೊಂಡರಾಜನಹಳ್ಳಿ ಬಳಿ ಇರುವ ಬೆಂಗಳೂರು–ಚೆನ್ನೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬೆಂಬಲ ಬೆಲೆ ನೀಡದ ಹಿನ್ನೆಲೆ, ಕಳೆದ 22 ದಿನಗಳಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದರು. ಬಂದ್, ಹೋರಾಟ ಮಾಡಿದರೂ ಪ್ರಯೋಜನವಾಗಿಲ್ಲ. ಇದರಿಂದ ಹೆದ್ದಾರಿ ತಡೆದು ರೈತರು ಪ್ರತಿಭಟನೆ ಆರಂಭಿಸಿದ್ದಾರೆ.
ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಹಣವನ್ನು ನೀಡುವಂತೆ ರೈತರು ಒತ್ತಾಯಿಸಿ, ರಾಜ್ಯ ಕಾಂಗ್ರೆಸ್ ಸರ್ಕಾರ ಹಾಗೂ ಶಾಸಕರ ವಿರುದ್ಧ ಧಿಕ್ಕಾರ ಕೂಗಿ ರೈತರು ಆಕ್ರೋಶ ಹೊರಹಾಕುತ್ತಿದ್ದಾರೆ. ಮಾವು ಬೆಳೆಗಾರರನ್ನು ಸರ್ಕಾರ ಬೀದಿಗೆ ತಳ್ಳಿದೆ ಎಂದು ಪ್ರತಿಭಟನಾಕಾರರು ಅಸಮಾಧಾನ ಹೊರಹಾಕಿದ್ದಾರೆ.
ಇತ್ತೀಚೆಗೆ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಮಾವು ಬೆಳೆಗೆ ಬೆಂಬಲ ಬೆಲೆ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದರು.