ವರದಿ: ವಿನಯ್ ದೊಡ್ಡಕೊಪ್ಪಲು
ಕೆ.ಆರ್.ನಗರ: ಉಪ್ಪಾರ ಸಮುದಾಯದವರು ಶಿಕ್ಷಣ ಕ್ಷೇತ್ರಕ್ಕೆ ಮೊದಲ ಆದ್ಯತೆ ನೀಡಬೇಕು ಎಂದು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಹೆಚ್.ಎನ್.ವಿಜಯ್ ಹೇಳಿದರು.
ಅವರು ಸಾಲಿಗ್ರಾಮ ತಾಲ್ಲೂಕಿನ ಚಿಕ್ಕಹನಸೋಗೆ ಗ್ರಾಮದಲ್ಲಿ ನಡೆದ ಶ್ರೀ ಭಗೀರಥ ಉಪ್ಪಾರ ಯುವಕರ ಸಂಘದ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ನಾವು ಯಾವುದೇ ಕ್ಷೇತ್ರದಲ್ಲಿ ಏನನ್ನಾದರೂ ಸಾಧಿಸಲು ಶಿಕ್ಷಣವೇ ಪ್ರಮುಖ ಅಸ್ತ್ರವಾಗಿದೆ. ಸಮಾಜದ ಬಂಧುಗಳು ತಮ್ಮ ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣವನ್ನು ಕೊಡಿಸಬೇಕು ಎಂದು ಕರೆ ನೀಡಿದರು.
ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಮಾಡುವ ಸಂದರ್ಭದಲ್ಲಿ ಏನಾದರೂ ಸಮಸ್ಯೆ ಇದ್ದರೆ ಸಂಘದವರು ಅಂತಹ ವಿಷಯಗಳನ್ನು ನಮ್ಮ ಗಮನಕ್ಕೆ ತಂದರೆ ಸಮಸ್ಯೆ ಇರುವ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಸಹಾಯ ಮಾಡುವುದಾಗಿ ಭರವಸೆ ನೀಡಿದ ಅವರು ಸಂಘವು ಮಾಡುವ ಸಮಾಜಮುಖಿ ಕೆಲಸಗಳಿಗೆ ಸದಾ ನಮ್ಮ ಸಹಕಾರ ಇರುತ್ತದೆ ಎಂದರು.
ಸಮಾಜದವರು ಅನಾವಶ್ಯಕ ಖರ್ಚುವೆಚ್ಚಗಳಿಗೆ ಕಡಿವಾಣ ಹಾಕುವ ಮೂಲಕ ಆರ್ಥಿಕವಾಗಿ ಬೆಳವಣಿಗೆ ಆಗಬೇಕು. ನಂತರ ನಮ್ಮ ಸುತ್ತ ಮುತ್ತ ಇರುವ ಜನರಿಗೆ ತಮ್ಮ ಕೈಲಾದ ಸಹಕಾರ ಮಾಡುವ ಮೂಲಕ ಸಮಾಜದ ಋಣ ತೀರಿಸಬೇಕೆಂದರು.
ಉಪ್ಪಾರ ಸಮುದಾಯದವರು ಸಂಘಟಿತರಾಗುವುದರ ಜೊತೆಗೆ ಜಾಗೃತರಾಗಬೇಕು ಆಗ ಮಾತ್ರ ಸಮಾಜದ ಮುಖ್ಯವಾಹಿನಿಗೆ ಬರಲು ಸಾಧ್ಯ. ಆ ನಿಟ್ಟಿನಲ್ಲಿ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರುಗಳು ಕಾರ್ಯನಿರ್ವಹಿಸಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ರಾಜ್ಯ ಉಪ್ಪಾರ ಯುವ ವೇದಿಕೆಯ ಮಾಜಿ ಜಿಲ್ಲಾಧ್ಯಕ್ಷ ಕೆ.ಟಿ.ಮೋಹನ್ ಕುಮಾರ್, ತಾಲೂಕು ಉಪ್ಪಾರ ಸಂಘದ ಗೌರವ ಅಧ್ಯಕ್ಷ ಡಿ.ತಮ್ಮಯ್ಯ, ಅಧ್ಯಕ್ಷ ಮಹದೇವ್, ಉಪಾಧ್ಯಕ್ಷ ಟಿ.ರಾಮಕೃಷ್ಣ, ಸಲಹೆಗಾರ ಸೋಮಣ್ಣ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸೋಮಶೇಖರ್, ಸದಸ್ಯರುಗಳಾದ ಮಾದಯ್ಯ, ಲೋಕೇಶ್, ಶ್ರೀ ಭಗೀರಥ ಉಪ್ಪಾರ ಯುವಕರ ಸಂಘದ ಅಧ್ಯಕ್ಷ ಪರುಶುರಾಮ್, ನಿವೃತ್ತ ಶಿಕ್ಷಕ ಜವರೇಗೌಡ, ಮುಖಂಡ ಶ್ರೀಧರ್, ಸಂಘದ ಉಪಾಧ್ಯಕ್ಷ ಶಿವಕುಮಾರ್, ಕಾರ್ಯದರ್ಶಿ ಅರುಣ್ ಕುಮಾರ್, ಖಜಾಂಚಿ ಎಲ್ಲೆಗೌಡ, ಪದಾಧಿಕಾರಿಗಳು, ಸದಸ್ಯರು, ಯುವಕರು, ಮಹಿಳೆಯರು ಸೇರಿದಂತೆ ಹಲವರು ಭಾಗವಹಿಸಿದ್ದರು.