ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ ಅಧಿಕಾರಿಗಳು ಮತ್ತೋರ್ವ ಆರೋಪಿಯನ್ನು ಮಂಗಳವಾರ ಬಂಧನಕ್ಕೊಳಪಡಿಸಿದ್ದಾರೆ.
ಆತ್ಮಹತ್ಯೆಗೆ ಶರಣಾದ ನಿಗಮದ ಅಧಿಕಾರಿ ಚಂದ್ರಶೇಖರನ್ ಬರೆದಿದ್ದ ಮರಣಪತ್ರದಲ್ಲಿ ಸಾಯಿತೇಜ ಹೆಸರು ಉಲ್ಲೇಖಿಸಿದ್ದರು. ಈ ಹಿನ್ನೆಲೆಯಲ್ಲಿ ಎಸ್ಐಟಿ ಅಧಿಕಾರಿಗಳು ಸಾಯಿತೇಜ ಅವರನ್ನು ಹೈದರಾಬಾದ್ ನಲ್ಲಿ ಬಂಧನಕ್ಕೊಳಪಡಿಸಿದ್ದು, ಬೆಂಗಳೂರಿಗೆ ಕರೆತಂದಿದ್ದಾರೆಂದು ತಿಳಿದುಬಂದಿದೆ.
ಇದರೊಂದಿಗೆ ಪ್ರಕರಣ ಸಂಬಂಧ ಬಂಧಿತರ ಒಟ್ಟು ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ಹೈದರಾಬಾದ್ನ ಫಸ್ಟ್ ಫೈನಾನ್ಸ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್ನ ಅಧ್ಯಕ್ಷ ಸತ್ಯನಾರಾಯಣ ಅವರ ಸಹವರ್ತಿಯಾಗಿ ಸಾಯಿತೇಜ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.
ನ್ಯಾಯಾಲಯಕ್ಕೆ ಹಾಜರುಪಡಿಸಿದ ನಂತರ ಸಾಯಿತೇಜಾ ಅವರನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಪಾಲಿಕೆಯಿಂದ ಸಹಕಾರ ಸಂಘಕ್ಕೆ ಹಣ ವರ್ಗಾವಣೆ ಮಾಡುವಲ್ಲಿ ಸಾಯಿತೇಜಾ ಭಾಗಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಸತ್ಯನಾರಾಯಣ ಅವರನ್ನು ಜೂನ್ 4 ರಂದು ಬಂಧಿಸಲಾಗಿತ್ತು.