ಅಹಮದಾಬಾದ್: 2025-26ನೇ ಸಾಲಿನ ವಿಜಯ್ ಹಜಾರೆ ಟ್ರೋಫಿ ಟೂರ್ನಿಯಲ್ಲಿ ಕರ್ನಾಟಕ ಹಾಗೂ ತ್ರಿಪುರ ತಂಡಗಳು ಮುಖಾಮುಖಿಯಾಗಿದ್ದು, ರಾಜ್ಯದ ಸ್ಟಾರ್ ಕ್ರಿಕೆಟಿಗ ದೇವದತ್ ಪಡಿಕ್ಕಲ್ ಮತ್ತೊಂದು ಶತಕ ಸಿಡಿಸಿ ಸಂಭ್ರಮಿಸಿದ್ದಾರೆ.
ಇನ್ನೂ ಐಪಿಎಲ್ನಲ್ಲಿ ಆರ್ಸಿಬಿ ತಂಡದ ಪ್ರಮುಖ ಆಟಗಾರನಾಗಿ ಗುರುತಿಸಿಕೊಂಡಿರುವ ದೇವದತ್ ಪಡಿಕ್ಕಲ್, ಈ ಆವೃತ್ತಿಯ ವಿಜಯ್ ಹಜಾರೆ ಟ್ರೋಫಿ ಟೂರ್ನಿಯಲ್ಲಿ ನಾಲ್ಕನೇ ಶತಕ ಸಿಡಿಸಿ ಮಿಂಚಿದ್ದಾರೆ. ಪಡಿಕ್ಕಲ್ ಶತಕದ ನೆರವಿನಿಂದ ಕರ್ನಾಟಕ ತಂಡವು ನಿಗದಿತ 50 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು 332 ರನ್ ಬಾರಿಸಿದ್ದು, ಗೆಲ್ಲಲು ತ್ರಿಪುರಗೆ ಕಠಿಣ ಗುರಿ ನೀಡಿದೆ.
ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಮೊದಲು ಬ್ಯಾಟ್ ಮಾಡಿದ ಕರ್ನಾಟಕ ತಂಡವು ಆರಂಭದಲ್ಲೇ ನಾಯಕ ಮಯಾಂಕ್ ಅಗರ್ವಾಲ್(5) ಹಾಗೂ ಕರುಣ್ ನಾಯರ್ ಶೂನ್ಯಕ್ಕೆ ವಿಕೆಟ್ ಒಪ್ಪಿಸಿ ನಿರಾಸೆ ಮೂಡಿಸಿದ್ದು, ಆರು ರನ್ ಗಳಿಸುವಷ್ಟರಲ್ಲಿ ಕರ್ನಾಟಕ ತಂಡವು ಮೊದಲ ಎರಡು ವಿಕೆಟ್ ಕಳೆದುಕೊಂಡು ಆರಂಭಿಕ ಆಘಾತಕ್ಕೆ ಒಳಗಾಯಿತು.
ಇದಾದ ಬಳಿಕ ಮೂರನೇ ವಿಕೆಟ್ಗೆ ದೇವದತ್ ಪಡಿಕ್ಕಲ್ ಹಾಗೂ ಸ್ಮರಣ್ ರವಿಚಂದ್ರನ್ 136 ರನ್ಗಳ ಆಕರ್ಷಕ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು. ಸ್ಮರಣ್ ರವಿಚಂದ್ರನ್ 60 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು.
ಇನ್ನು 2025-26ನೇ ಸಾಲಿನ ವಿಜಯ್ ಹಜಾರೆ ಟ್ರೋಫಿ ಟೂರ್ನಿಯಲ್ಲಿ ದೇವದತ್ ಪಡಿಕ್ಕಲ್ ರೆಡ್ ಹಾಟ್ ಫಾರ್ಮ್ನಲ್ಲಿದ್ದು ಇದೀಗ ತ್ರಿಪುರ ವಿರುದ್ದವೂ ಶತಕ ಸಿಡಿಸಿ ಮಿಂಚಿದ್ದಾರೆ. ಜಾರ್ಖಂಡ್, ಕೇರಳ, ಪುದುಚೆರಿ ಮೇಲೆ ಶತಕ ಸಿಡಿಸಿದ್ದ ಪಡಿಕ್ಕಲ್ ಇದೀಗ ತ್ರಿಪುರ ಎದುರು ತಮ್ಮ ಬ್ಯಾಟಿಂಗ್ ಪರಾಕ್ರಮ ಅನಾವರಣ ಮಾಡಿದ್ದಾರೆ.
ತ್ರಿಪುರ ಬೌಲರ್ಗಳನ್ನು ದಿಟ್ಟವಾಗಿ ಎದುರಿಸಿದ ದೇವದತ್ ಪಡಿಕ್ಕಲ್ 120 ಎಸೆತಗಳನ್ನು ಎದುರಿಸಿ 8 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 108 ರನ್ ಸಿಡಿಸಿ ಅಭಿಜಿತ್ ಸರ್ಕಾರ್ಗೆ ವಿಕೆಟ್ ಒಪ್ಪಿಸಿದರು. ದೇಶಿ ಕ್ರಿಕೆಟ್ನಲ್ಲಿ ಅದ್ಭುತ ಫಾರ್ಮ್ನಲ್ಲಿರುವ ದೇವದತ್ ಪಡಿಕ್ಕಲ್ಗೆ ಇದು ಲಿಸ್ಟ್ ಎ ಕ್ರಿಕೆಟ್ನಲ್ಲಿ 13ನೇ ಶತಕ ಎನಿಸಿಕೊಂಡಿದೆ.



