ಬೆಂಗಳೂರು: ವಕ್ಫ್ ಆಸ್ತಿ ಒತ್ತುವರಿ ಸಮಸ್ಯೆ ವಿರುದ್ಧ ನಮ್ಮ ಭೂಮಿ ನಮ್ಮ ಹಕ್ಕು ಶೀರ್ಷಿಕೆಯ ಅಡಿಯಲ್ಲಿ ಜನಾಂದೋಲನ ಮಾಡಲು ನಿರ್ಧರಿಸಿದ್ದೇವೆ. ನವೆಂಬರ್ ೨೧ ಮತ್ತು ೨೨ರಂದು ರಾಜ್ಯದ ಎಲ್ಲ ಜಿಲ್ಲಾಧಿಕಾರಿ ಕಚೇರಿ ಮತ್ತು ತಾಲ್ಲೂಕು ತಹಸೀಲ್ದಾರರ ಕಚೇರಿಗಳ ಮುಂದೆ ದಿನವಿಡೀ ಪ್ರತಿಭಟನೆ ನಡೆಸಲಿದ್ದೇವೆ ಎಂದು ಡಾ.ಸಿ.ಎನ್.ಅಶ್ವತ್ಥನಾರಾಯಣ್ ಅವರು ತಿಳಿಸಿದ್ದಾರೆ.
ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿಭಟನೆಯ ಜೊತೆಗೆ ಎಲ್ಲ ಸಂತ್ರಸ್ತರಿಂದ ಅರ್ಜಿಗಳ ಸ್ವೀಕಾರ, ವಕ್ಫ್ ಅಧಿಕಾರ ದುರ್ಬಳಕೆಯಿಂದ ಸಮಸ್ಯೆ -ಶೋಷಣೆಗೆ ಒಳಗಾದವರ ಮಾಹಿತಿ ಸಂಗ್ರಹಿಸಲಾಗುತ್ತದೆ ಎಂದು ವಿವರಿಸಿದರು.
ಬೆಂಗಳೂರಿನ ಪ್ರೀರ್ಡಂ ಪಾರ್ಕ್ನಲ್ಲಿ ಪ್ರತಿಭಟನೆ ನಡೆಸಲಿದ್ದೇವೆ. ಜೊತೆಗೆ ೩ ತಂಡಗಳನ್ನು ರಚಿಸಿದ್ದೇವೆ. ಕೇಂದ್ರದ ಸಚಿವರು, ಮಾಜಿ ಮುಖ್ಯಮಂತ್ರಿಗಳು, ಹಿರಿಯರು, ವರಿಷ್ಠರು ಸೇರಿ ೩ ತಂಡಗಳು ಕಾರ್ಯ ನಿರ್ವಹಿಸುತ್ತಿವೆ. ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಪ್ರತಿಪಕ್ಷದ ನಾಯಕ ಆರ್.ಅಶೋಕ್, ವಿಧಾನಪರಿಷತ್ತಿನ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಈ ೩ ತಂಡಗಳ ನೇತೃತ್ವ ವಹಿಸುತ್ತಿದ್ದಾರೆ ಎಂದು ತಿಳಿಸಿದರು.
ಅಧಿವೇಶನಕ್ಕೂ ಮೊದಲು ಬೆಳಗಾವಿಯಲ್ಲಿ ವಕ್ಫ್ ವಿಚಾರವಾಗಿ ಬೃಹತ್ ಸಮಾವೇಶವನ್ನು ಏರ್ಪಡಿಸಲಾಗುವುದು. ಅಧಿಕಾರ ದುರ್ಬಳಕೆ ಕೈಬಿಡುವಂತೆ ಕಾಂಗ್ರೆಸ್ ಸರಕಾರ ಮತ್ತು ವಕ್ಫ್ ಮಂಡಳಿಗೆ ಸ್ಪಷ್ಟ ಸಂದೇಶ ನೀಡಲಿದ್ದೇವೆ ಎಂದು ಪ್ರಕಟಿಸಿದರು. ಅಹವಾಲು, ಮಾಹಿತಿ ಸಂಗ್ರಹಕ್ಕಾಗಿ ಪ್ರತಿ ಜಿಲ್ಲೆಯಲ್ಲಿ ರೈತರು, ವಕೀಲರು ಸೇರಿ ಪ್ರಮುಖರುಳ್ಳ ೫ ಜನರ ತಂಡ ರಚಿಸಿದ್ದೇವೆ ಎಂದರು. ಬಿಜೆಪಿ ಒತ್ತಾಯ ಮತ್ತು ಹೋರಾಟದ ಬಳಿಕ ರಾಜ್ಯದ ಕಾಂಗ್ರೆಸ್ ಸರಕಾರವು ವಕ್ಫ್ ಸಂಬಂಧ ಹೊರಡಿಸಿದ್ದ ನೋಟಿಸ್ ಹಿಂದಕ್ಕೆ ಪಡೆಯಲು ಸೂಚನೆ ನೀಡಿದೆ.