ಮಡಿಕೇರಿ: ಕೇರಳ ರಾಜ್ಯದ ವಯನಾಡಿನಲ್ಲಿ ಸಂಭವಿಸಿದ ಪ್ರವಾಹ, ಭೂಕುಸಿತದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ ಕೊಡಗಿನಲ್ಲಿ ೧೦೪ ಸಂಭವನೀಯ ಭೂಕುಸಿತ-ಪ್ರವಾಹ ಪ್ರದೇಶಗಳನ್ನು ಗುರುತು ಮಾಡಿದ್ದು, ೨,೯೯೫ ಕುಟುಂಬಗಳ ಸ್ಥಳಾಂತರ ಮಾಡಲು ಕ್ರಮ ಕೈಗೊಳ್ಳುತ್ತಿದೆ ಎಂದು ತಿಳಿದುಬಂದಿದೆ.
ಭಾರತೀಯ ಭೂಗರ್ಭ ಇಲಾಖೆ ಸಲ್ಲಿಸಿದ ವರದಿಯನ್ನು ಆಧರಿಸಿ ಈ ಪ್ರದೇಶಗಳನ್ನು ಗುರುತಿಸಲಾಗಿದ್ದು, ಈ ತಿಂಗಳು ಭಾರೀ ಮಳೆಯಾಗುವ ನಿರೀಕ್ಷೆ ಇರುವುದರಿಂದ ಜಿಲ್ಲಾಡಳಿತವು ಸಂಭಾವ್ಯ ಭೂಕುಸಿತದ ಪ್ರದೇಶಗಳಲ್ಲಿ ನೆಲೆಗೊಂಡಿರುವ ೨,೯೯೫ ಕುಟುಂಬಗಳಿಗೆ ಸುರಕ್ಷಿತ ಪ್ರದೇಶಗಳಿಗೆ ತೆರಳಲು ನೋಟಿಸ್ ನೀಡಿದೆ.
ಈ ಹಿಂದಿನ ವಿಪತ್ತು ವರದಿಗಳು ಮತ್ತು ಸಮೀಕ್ಷೆಗಳ ಆಧಾರದ ಮೇಲೆ ಈ ಪ್ರದೇಶಗಳನ್ನು ಗುರುತಿಸಲಾಗಿದೆ. ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಪ್ರದೇಶಗಳನ್ನು ಗುರುತಿಸಿ ಸ್ಥಳಾಂತರಿಸಬೇಕಾದ ಕುಟುಂಬಗಳನ್ನು ಅಂತಿಮಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.