ಬೆಂಗಳೂರು : ಮಂಡ್ಯದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯನ್ನು ಮೈಸೂರಿನಲ್ಲಿ ಅಬಕಾರಿ ಉಪ ಆಯುಕ್ತರನ್ನಾಗಿ ನಿಯೋಜಿಸಲು ಸಿಎಂ ಬರೆದಿದ್ದಾರೆ ಎನ್ನಲಾದ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಇದರ ಬೆನ್ನಲ್ಲೇ ನಕಲಿ ಪತ್ರ ಸೃಷ್ಟಿಸಿದವರ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರವಾಗಿ ಕಿಡಿಕಾರಿದ್ದಾರೆ.
ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಪ್ರತಿಕ್ರಿಯೆ ನೀಡಿ, ಸಕಾರಾತ್ಮಕ ಟೀಕೆಗೆ ನಾವು ಮುಕ್ತರಿದ್ದೇವೆ, ಸುಳ್ಳು ಸುದ್ದಿಗಳ ಅಪಪ್ರಚಾರವನ್ನು ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.
ಯಾರೋ ಕೆಲವು ಕಿಡಿಗೇಡಿಗಳು ನನ್ನ ಕಚೇರಿಯ ನಕಲಿ ಟಿಪ್ಪಣಿಯೊಂದನ್ನು ಸೃಷ್ಟಿಸಿ, ಮಂಡ್ಯ ಜಿಲ್ಲೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾದ ಡಾ.ಕೆ.ಮೋಹನ್ ಇವರನ್ನು ಮೈಸೂರು ಗ್ರಾಮಾಂತರದ ಅಬಕಾರಿ ಉಪ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು, ಅಪಪ್ರಚಾರದಲ್ಲಿ ತೊಡಗಿದ್ದಾರೆ. ಇದು ಖಂಡನೀಯ ಮತ್ತು ಅತ್ಯಂತ ಗಂಭೀರ ಸ್ವರೂಪದ ಅಪರಾಧವಾಗಿದೆ ಎಂದು ಕಿಡಿಕಾರಿದ್ದಾರೆ.
ಇನ್ನೂ ಈ ಬಗ್ಗೆ ನನ್ನ ಸಚಿವಾಲಯದ ಅಧಿಕಾರಿಗಳು ದೂರು ದಾಖಲಿಸಿದ್ದು, ಪೊಲೀಸ್ ಇಲಾಖೆ ಇದರ ಹಿಂದಿರುವ ದುಷ್ಟರನ್ನು ಪತ್ತೆ ಮಾಡಿ, ಕಾನೂನು ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದ್ದಾರೆ.
ಅಲ್ಲದೆ ಇಂತಹ ನಕಲಿ ಸುದ್ದಿಗಳನ್ನು ನಂಬಿ ಶೇರ್ ಮಾಡುವ ಮುನ್ನ ಜಾಲತಾಣ ಬಳಕೆದಾರರು ಎಚ್ಚರಿಕೆ ವಹಿಸಬೇಕು. ಈಗಿನ ಫೋಟೋಶಾಪ್/ಎಐ ಯುಗದಲ್ಲಿ ವಾಟ್ಸ್ಆ್ಯಪ್ ಮಾಹಿತಿಗಳ ಸತ್ಯಾಸತ್ಯತೆಯನ್ನು ಪರಾಮರ್ಶಿಸದೆ ಇತರರ ಜೊತೆ ಹಂಚಿಕೊಳ್ಳುವುದು ಕೂಡ ಅಪರಾಧವೆ ಆಗಿದ್ದು, ಸಕಾರಾತ್ಮಕ ಟೀಕೆಗೆ ನಾವು ಮುಕ್ತರಿದ್ದೇವೆ, ಸುಳ್ಳು ಸುದ್ದಿಗಳ ಅಪಪ್ರಚಾರವನ್ನು ಸಹಿಸುವುದಿಲ್ಲ ಎಂದಿದ್ದಾರೆ.



