ಬೆಂಗಳೂರು : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯದ ರಾಜಕೀಯ ಮತ್ತು ಆಡಳಿತಾತ್ಮಕವಾಗಿ ಮಹತ್ವದ ಹಲವು ವಿಚಾರಗಳ ಕುರಿತು ಚರ್ಚೆ ನಡೆಯಿತು. ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR), ಜಿಬಿಎ ಚುನಾವಣೆ ಹಾಗೂ ಸಚಿವ ಸಂಪುಟ ವಿಸ್ತರಣೆ ಸಭೆಯ ಪ್ರಮುಖ ಅಜೆಂಡಾಗಳಾಗಿದ್ದವು.
ಈ ಬಗ್ಗೆ ಸಭೆಯಲ್ಲಿ ಜಿಬಿಎ ಚುನಾವಣೆ ನಡೆಸುವ ಕುರಿತು ಸುದೀರ್ಘ ಚರ್ಚೆ ನಡೆದಿದ್ದು, ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆಯ ಹಿನ್ನೆಲೆಯಲ್ಲಿ ಚುನಾವಣೆಯನ್ನು ಸದ್ಯಕ್ಕೆ ಮುಂದೂಡುವ ಸಾಧ್ಯತೆಗಳ ಬಗ್ಗೆಯೂ ಅಭಿಪ್ರಾಯ ವಿನಿಮಯ ನಡೆದಿದೆ ಎನ್ನಲಾಗಿದೆ.
ಈ ಸಂಬಂಧ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿ ಚುನಾವಣೆಯನ್ನು ಮುಂದೂಡುವುದೇ, ಅಥವಾ ರಾಜ್ಯ ಚುನಾವಣಾ ಆಯೋಗ ಸಿದ್ಧಪಡಿಸಿರುವ ಹಾಲಿ ಮತದಾರರ ಪಟ್ಟಿಯ ಆಧಾರದ ಮೇಲೆ ಚುನಾವಣೆ ನಡೆಸುವುದೇ ಎಂಬ ಆಯ್ಕೆಗಳ ಕುರಿತು ಸಚಿವ ಸಂಪುಟದಲ್ಲಿ ಸಾಧಕ-ಬಾಧಕಗಳ ಪರಿಶೀಲನೆ ನಡೆದಿದ್ದು, ಎಸ್ಐಆರ್ ಪ್ರಕ್ರಿಯೆಯ ಇತ್ತೀಚಿನ ಬೆಳವಣಿಗೆಗಳು ಹಾಗೂ ಅದರ ರಾಜಕೀಯ ಪರಿಣಾಮಗಳ ಬಗ್ಗೆಯೂ ಸಭೆಯಲ್ಲಿ ಚರ್ಚೆಯಾಗಿದೆ ಎಂದು ತಿಳಿದುಬಂದಿದೆ.
ಇದೇ ವೇಳೆ ರಾಜ್ಯ ರಾಜಕೀಯದಲ್ಲಿ ಕುತೂಹಲ ಮೂಡಿಸಿರುವ ಸಚಿವ ಸಂಪುಟ ವಿಸ್ತರಣೆ ವಿಚಾರವೂ ಪ್ರಸ್ತಾಪವಾಗಿದ್ದು, ಹಾಲಿ ಸಚಿವರ ಅಭಿಪ್ರಾಯವನ್ನು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಂಗ್ರಹಿಸಿದ್ದು, ವಿದೇಶ ಪ್ರವಾಸದಲ್ಲಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇನ್ನೆರಡು ದಿನಗಳಲ್ಲಿ ಭಾರತಕ್ಕೆ ಮರಳಲಿದ್ದಾರೆ. ಅವರ ವಾಪಸ್ಸಿನ ಬಳಿಕ ಹೈಕಮಾಂಡ್ ಮಟ್ಟದಲ್ಲಿ ಸಂಪುಟ ವಿಸ್ತರಣೆ ಕುರಿತ ಚರ್ಚೆಗಳು ಆರಂಭವಾಗುವ ಸಾಧ್ಯತೆ ಇದೆ ಎಂದು ಸಚಿವರಿಗೆ ಮಾಹಿತಿ ನೀಡಲಾಗಿದೆ.



