ಮೈಸೂರು: ಸಾಂಸ್ಕೃತಿಕ ನಗರಿ ಹಾಗೂ ಕರ್ನಾಟಕದ ಪ್ರಮುಖ ನಗರಗಳಲ್ಲಿ ಒಂದಾಗಿರುವ ಮೈಸೂರಿನಲ್ಲಿ ಕೈಗಾರಿಕೆಗೆ ಇನ್ನಷ್ಟು ಒತ್ತು ನೀಡಬೇಕಾದ ಅಗತ್ಯವಿದೆ. ಈ ನಿಟ್ಟಿನಲ್ಲಿ ಆಟೋಮೊಬೈಲ್ ಮತ್ತು ಎಲೆಕ್ಟ್ರಿಕ್ ವಾಹನ ಉತ್ಪಾದನಾ ಕ್ಲಸ್ಟರ್ ಸ್ಥಾಪನೆ ಮಾಡಬೇಕು ಎಂದು ಕೇಂದ್ರ ಬೃಹತ್ ಕೈಗಾರಿಕೆ ಸಚಿವ ಎಚ್.ಡಿ. ಕುಮಾರಸ್ವಾಮಿಗೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮನವಿ ಮಾಡಿದರು.
ಈ ಸಂಬಂಧ ಕೇಂದ್ರ ಸಚಿವರ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ ಸಂಸದ ಯದುವೀರ್ ಒಡೆಯರ್, ಮೈಸೂರು ಕ್ಷೇತ್ರದ ಸರ್ವಾಂಗೀಣ ಪ್ರಗತಿಗೆ ಆದ್ಯತೆ ನೀಡಬೇಕು. ಮೈಸೂರು ವ್ಯಾಪ್ತಿಯಲ್ಲಿ ರಾಷ್ಟ್ರೀಯ ಹೆದ್ದಾರಿಗಳು, ಎಕ್ಸ್ಪ್ರೆಸ್ವೇಗಳು ಮತ್ತು ರೈಲು ಸಂಪರ್ಕಗಳ ಮೂಲಕ ಬೆಂಗಳೂರು, ಚೆನ್ನೈ ಮತ್ತು ಕೇರಳಕ್ಕೆ ಅತ್ಯುತ್ತಮ ಸಂಪರ್ಕ ಹೊಂದಿದೆ. ನಗರವು ಬೆಂಗಳೂರು ಮತ್ತು ಕಣ್ಣೂರಿನಲ್ಲಿರುವ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳಗೂ ಸಂಪರ್ಕ ಹೊಂದಿದೆ. ಈ ನಿಟ್ಟಿನಲ್ಲಿ ಆಟೋಮೊಬೈಲ್ ಮತ್ತು ವಾಹನ ಉತ್ಪಾದನಾ ಘಟಕ ಆರಂಭಿಸಿದರೆ ಅನುಕೂಲ ಹೆಚ್ಚು ಎಂದು ವಿವರಿಸಿದರು.
ಎಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್ಗಳು ಮತ್ತು ಸಂಶೋಧನಾ ಸಂಸ್ಥೆಗಳು ಕೂಡ ಇಲ್ಲಿವೆ. ಇಲ್ಲಿ ತಾಂತ್ರಿಕ ತರಬೇತಿಯೂ ಹೆಚ್ಚಾಗಿದೆ. ಮೈಸೂರಿನಲ್ಲಿ ಭೂ ಲಭ್ಯತೆ, ಕಡಿಮೆ ದಟ್ಟಣೆ, ಉತ್ತಮ ಗುಣಮಟ್ಟದ ಜೀವನ ಮತ್ತು ಕೈಗಾರಿಕೆಗೆ ಪೂರಕವಾದ ವಾತಾವರಣವಿದೆ. ಮೈಸೂರಿನಲ್ಲಿ ಆಟೋಮೊಬೈಲ್ ಮತ್ತು ಇವಿ ಉತ್ಪಾದನಾ ಕ್ಲಸ್ಟರ್ ಸ್ಥಾಪನೆ ಮಾಡುವುದರಿಂದ ಕೈಗಾರಿಕಾ ಬೆಳವಣಿಗೆಯನ್ನು ಹೆಚ್ಚಿಸುವುದಲ್ಲದೆ, ಯುವಕರಿಗೆ ಸಾವಿರಾರು ನೇರ ಮತ್ತು ಪರೋಕ್ಷ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತದೆ. ಇದು ಆಟೋ ಘಟಕಗಳು, ಬ್ಯಾಟರಿಗಳು, ಎಲೆಕ್ಟ್ರಾನಿಕ್ಸ್, ಲಾಜಿಸ್ಟಿಕ್ಸ್ ಕೈಗಾರಿಕೆಗಳನ್ನೂ ಬೆಂಬಲಿಸುತ್ತದೆಂದರು.
ಮೇಕ್ ಇನ್ ಇಂಡಿಯಾ, ಆತ್ಮನಿರ್ಭರ ಭಾರತ್ ಮತ್ತು ಇವಿ ಕ್ಷೇತ್ರದತ್ತ ಬಿಜೆಪಿ ಸರ್ಕಾರ ನೀಡಿರುವ ಆದ್ಯತೆಗೆ ಅನುಗುಣವಾಗಿ ಕ್ರಮ ಕೈಗೊಳ್ಳುವಂತೆ ಕೋರಿದರು.



